ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಸಂಚುಕೋರರಾದ ಅಬು ಸಲೇಂ ಮತ್ತು ಕರಿಮುಲ್ಲಾ ಖಾನ್ಗೆ ಇಲ್ಲಿನ ವಿಶೇಷ ‘ಟಾಡಾ’ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದಲ್ಲಿ ಅಪರಾಧಿಗಳು ಎಂದು ಪರಿಗಣಿಸಲಾಗಿರುವ ತಹಿರ್ ಮರ್ಚಂಟ್ ಮತ್ತು ಫಿರೋಜ್ ಅಬ್ದುಲ್ ರಶೀದ್ ಖಾನ್ಗೆ ಮರಣದಂಡನೆ ವಿಧಿಸಲಾಗಿದೆ. ಮತ್ತೊಬ್ಬ ಆರೋಪಿ ರಿಯಾಜ್ ಸಿದ್ದಕಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಸರಣಿ ಬಾಂಬ್ ಸ್ಫೋಟ ಸಂಭವಿಸಿ 24 ವರ್ಷಗಳ ನಂತರ ಎರಡನೇ ಹಂತದ ವಿಚಾರಣೆಯಲ್ಲಿ ಏಳು ಜನರ ಪೈಕಿ ಅಬ್ದುಲ್ ಖಯಾಂನನ್ನು ಸಾಕ್ಷ್ಯಾಧಾರಗಳ ಕೊರತೆಯ ಕಾರಣಕ್ಕೆ ಖುಲಾಸೆ ಗೊಳಿಸಲಾಗಿತ್ತು. ಪ್ರಕರಣದ ಮತ್ತೊಬ್ಬ ಆರೋಪಿ ಮುಸ್ತಫಾ ದೊಸ್ಸಾನನ್ನೂ ಅಪರಾಧಿ ಎಂದು ಟಾಡಾ ನ್ಯಾಯಾಲಯ ಜೂನ್ 16ರಂದು ತೀರ್ಪು ನೀಡಿತ್ತು. ಜೂನ್ 28ರಂದು ಆತ ಮೃತಪಟ್ಟಿದ್ದರಿಂದ ಆತನ ವಿರುದ್ಧದ ಪ್ರಕರಣವನ್ನು ಕೊನೆಗೊಳಿಸಲಾಗಿದೆ.
1993ರ ಭಯಾನಕ ಸರಣಿ ಬಾಂಬ್ ಸ್ಫೋಟದಲ್ಲಿ 257 ಜನರು ಸತ್ತಿದ್ದಲ್ಲದೆ 713 ಜನರು ಗಂಭೀರವಾಗಿ ಗಾಯಗೊಂಡಿದ್ದರು. ₹27 ಕೋಟಿ ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.