ADVERTISEMENT

ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್‌ ಸಿದ್ಧ: ರಾಜ್‌ ಬಬ್ಬರ್‌

ಪಿಟಿಐ
Published 5 ಡಿಸೆಂಬರ್ 2016, 10:52 IST
Last Updated 5 ಡಿಸೆಂಬರ್ 2016, 10:52 IST
ರಾಜ್‌ ಬಬ್ಬರ್‌
ರಾಜ್‌ ಬಬ್ಬರ್‌   
ಉತ್ತರಪ್ರದೇಶ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಜೊತೆಯಾಗಿ ಕಣಕ್ಕಿಳಿಯಲಿವೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಉತ್ತರ ಪ್ರದೇಶ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ರಾಜ್‌ ಬಬ್ಬರ್‌ ನಾವು ಏಕಾಂಗಿಯಾಗಿ ಕಣಕ್ಕಿಳಿಯಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
 
‘ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಮೆಯವೇ ಇಲ್ಲ. ನಾವು ಏಕಾಂಗಿಯಾಗಿ ಚುನಾವಣೆ ಎದುರಿಸಲು ಸಿದ್ಧವಾಗಿದ್ದು, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರುಗಳಿಗೆ ಸೂಕ್ತ ಅಭ್ಯರ್ಥಿಗಳ ನಾಮ ನಿರ್ದೇಶನ ಮಾಡುವಂತೆ ಸೂಚಿಸಿದ್ದೇವೆ. ಡಿಸೆಂಬರ್‌ ಅಂತ್ಯದೊಳಗೆ ನಮ್ಮ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ’ ಎಂದು ತಿಳಿಸಿದ್ದಾರೆ.
 
‘ಭಾರತೀಯ ಜನತಾ ಪಾರ್ಟಿ, ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷಗಳ ಬಗ್ಗೆ ಜನರು ಅಸಮಾಧಾನ ಹೊಂದಿದ್ದಾರೆ. ನೋಟುರದ್ದು ಕ್ರಮದಿಂದಾಗಿ ಜನರು ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಮಾಜವಾದಿ ಪಕ್ಷದಲ್ಲಿ ಹೊಂದಾಣಿಕೆಯಿಲ್ಲದೆ ಪಕ್ಷದೊಳಗೆ ಪೈಪೋಟಿ ಹುಟ್ಟಿಕೊಂಡಿದೆ.
 
ಬಹುಜನ ಸಮಾಜವಾದಿ ಪಕ್ಷ ಜನರ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿರುವುದರಿಂದ ಹೊಂದಾಣಿಕೆ ರಾಜಕಾರಣ ಮಾಡುವ ಅಗತ್ಯವಿಲ್ಲ. ಜನರು ಬದಲಾವಣೆಗಾಗಿ ಹಾತೊರೆಯುತ್ತಿದ್ದು ಈ ಬಾರಿ ಅಧಿಕಾರಕ್ಕೇರುವ ವಿಶ್ವಾಸವಿದೆ’ ಎಂದು ತಿಳಿಸಿದ್ದಾರೆ.

ಒಟ್ಟು 403 ಸದಸ್ಯರನ್ನು ಹೊಂದಿರುವ ಉತ್ತರ ಪ್ರದೇಶದ ವಿಧಾನ ಸಭೆಯ ಕಳೆದ ಬಾರಿಯ (2012) ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೇವಲ 29 ಸ್ಥಾನಗಳು ಮಾತ್ರ ದಕ್ಕಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.