ನವದೆಹಲಿ (ಪಿಟಿಐ): ವಿದೇಶಿ ಬ್ಯಾಂಕುಗಳಲ್ಲಿ ಭಾರತೀಯರ ಕಪ್ಪುಹಣ ಪ್ರಕರಣದ ತನಿಖೆ ಮಾಡಲು ಕೇಂದ್ರ ರಚಿಸಿರುವ ವಿಶೇಷ ತನಿಖಾ ತಂಡದ ಮೊದಲ ಸಭೆ ಸೋಮವಾರ ನಡೆಯಿತು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಬಿ.ಷಾ ನೇತೃತ್ವದ ಸಮಿತಿಯು, ಕೆಲವೊಂದು ಪ್ರಕರಣಗಳನ್ನು ತ್ವರಿತ ನ್ಯಾಯಾಲಯದ ಮುಂದೆ ಇಡುವ ಸಾಧ್ಯತೆಯನ್ನು ಪರಿಶೀಲಿಸಲು ನಿರ್ಧರಿಸಿತು ಎಂದು ಮೂಲಗಳು ತಿಳಿಸಿವೆ.
‘ಕಪ್ಪುಹಣದ ತನಿಖೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೇ ತನಿಖೆ ಸಾಗಬೇಕಾದ ಜಾಡಿನ ಕುರಿತು ನಿರ್ಧರಿಸಲಾಯಿತು’ ಎಂದು ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಪ್ಪುಹಣ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಬಾಕಿ ಪ್ರಕರಣಗಳ ಸಂಖ್ಯೆ ಹಾಗೂ ತನಿಖೆಯ ಪ್ರಗತಿಯ ಬಗ್ಗೆ ವರದಿ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ಇತರ ತನಿಖಾ ಸಂಸ್ಥೆಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.