ADVERTISEMENT

ಕಲ್ಲಿದ್ದಲು: ಸಿಂಗ್‌ ಹೇಳಿಕೆ ದಾಖಲಿಸಿಕೊಳ್ಳಲು ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2014, 11:26 IST
Last Updated 16 ಡಿಸೆಂಬರ್ 2014, 11:26 IST

ನವದೆಹಲಿ (ಐಎಎನ್‌ಎಸ್‌): ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗ­ರ­ಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನ­ಮೋಹನ್‌ ಸಿಂಗ್‌ ಅವರ ಹೇಳಿಕೆ ದಾಖಲಿಸಿಕೊಳ್ಳುವಂತೆ ವಿಶೇಷ ನ್ಯಾಯಾಲಯ ಮಂಗಳವಾರ ಸಿಬಿಐಗೆ ಸೂಚಿಸಿದೆ.

ಕಲ್ಲಿದ್ದಲು ಹಗ­ರ­ಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಕುಮಾರ ಮಂಗಳಂ ಬಿರ್ಲಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿ.ಸಿ.ಪಾರೇಖ್‌ ಮತ್ತಿತರರ ವಿಚಾರಣೆ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ವಿಶೇಷ ನ್ಯಾಯಾ­ಧೀಶ ಭರತ್‌ ಪರಾಶರ್‌ ಅವರು, ಆಗ ಕಲ್ಲಿದ್ದಲು ಖಾತೆ­ ನಿರ್ವಹಿಸುತ್ತಿದ್ದ ಮನ­ಮೋಹನ್‌ ಸಿಂಗ್‌ ಅವರ ಹೇಳಿಕೆಯನ್ನು ದಾಖಲಿಸಿ­ಕೊಳ್ಳುವಂತೆ ಸಿಬಿಐಗೆ ಸೂಚಿಸಿದರು.

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿನ ಅಕ್ರಮ ಆಪಾದನೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಮನಮೋಹನ್ ಸಿಂಗ್ ಅವರ ಸಲಹೆಗಾರ ಟಿ.ಕೆ.ಎ. ನಾಯರ್ ಅವರನ್ನು ಸಿಬಿಐ ಪ್ರಶ್ನಿಸಿದೆ. ಪ್ರಧಾನ ಮಂತ್ರಿ ಸಚಿವಾಲಯದ ಇಬ್ಬರು ಮಾಜಿ ಅಧಿಕಾರಿಗಳಾದ ವಿನಿ ಮಹಾಜನ್ ಮತ್ತು ಅಶೀಷ್ ಗುಪ್ತಾ ಅವರನ್ನೂ ವಿಚಾರಣೆಗೆ ಗುರಿಪಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗಳ ಪರಿಸಮಾಪ್ತಿ ವರದಿಯನ್ನು ಸಿಬಿಐ ಈಗಾಗಲೇ ಸಲ್ಲಿಸಿದ್ದು, ಮುಂದಿನ ವಿಚಾರಣೆ ಜನವರಿ 27ಕ್ಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT