ADVERTISEMENT

ಕಿರುಕುಳ- ಆರೋಪ: ಎಎಪಿ ಕಾರ್ಯಕರ್ತೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2016, 19:30 IST
Last Updated 20 ಜುಲೈ 2016, 19:30 IST

ನವದೆಹಲಿ (ಪಿಟಿಐ): ಆಮ್‌ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆ  ಮಾಡಿಕೊಂಡ ಘಟನೆ ದೆಹಲಿ ಹೊರವಲಯದ  ನರೆಲಾದಲ್ಲಿ ಬುಧವಾರ ನಡೆದಿದೆ. 
ಪಕ್ಷದ ಕಾರ್ಯಕರ್ತರೊಬ್ಬರು ಕಿರುಕುಳ ನೀಡಿದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಎಎಪಿ ಕಾರ್ಯಕರ್ತೆ ವಿಷ ಸೇವಿಸಿದ್ದಳು. ಅಸ್ವಸ್ಥಗೊಂಡ ಆಕೆಯನ್ನು  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ ಎಂದು  ಪೊಲೀಸರು ತಿಳಿಸಿದ್ದಾರೆ.

‘ಅನುಚಿತವಾಗಿ ವರ್ತಿಸಿ, ಕಿರುಕುಳ ನೀಡಿದ ಕಾರಣಕ್ಕೆ ತಮ್ಮದೇ ಪಕ್ಷದ ಕಾರ್ಯಕರ್ತ ರಮೇಶ್‌ ವಾದ್ವಾ ಎಂಬುವವರ ವಿರುದ್ಧ ನನ್ನ ಪತ್ನಿ ಕಳೆದ ಜೂನ್‌ನಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ್ವಾನನ್ನು ಬಂಧಿಸಲಾಗಿತ್ತು. ವಾದ್ವಾ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಕೆಲವು ಸಹಚರರೊಂದಿಗೆ ಸೇರಿ ಮಾನಸಿಕ ಹಿಂಸೆ ನೀಡುತ್ತಿದ್ದ. ಇದರಿಂದ ನೊಂದಿದ್ದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಆರೋಪಿಯನ್ನು ಶಾಸಕರೊಬ್ಬರು ರಕ್ಷಿಸುತ್ತಿದ್ದಾರೆ ಎಂದು ಕಾರ್ಯಕರ್ತೆಯ ಪತಿ ಆರೋಪಿಸಿದ್ದಾರೆ.

ಕಿರುಕುಳದ ಬಗ್ಗೆ ಮಹಿಳೆ ನೀಡಿದ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಶಾಸಕ ಶರದ್‌ ಚೌಹಾಣ್‌ ಈ ಸಾವಿಗೆ ಕಾರಣ ಎಂದು ಬಿಜೆಪಿ ಆರೋಪಿಸಿದೆ.

ಮಹಿಳಾ ಕಾರ್ಯಕರ್ತೆ ಸಾವಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಎಎಪಿ ದೂರಿದೆ. ಪ್ರಕರಣದ ನ್ಯಾಯಾಂಗ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ.

ಅನುಚಿತ ವರ್ತನೆ

ವಿದ್ಯುತ್‌ ಕಡಿತ ಸಮಸ್ಯೆ ಹೇಳಲು ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಮನೆಗೆ ಹೋದ ಸಂದರ್ಭ ಶಾಸಕರ ಮನೆಯಲ್ಲಿದ್ದ ಯುವಕನೊಬ್ಬ ತನ್ನ ಜತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೊಬ್ಬಳು ದೂರಿದ್ದಾಳೆ.
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನ ವಿರುದ್ಧ ಜಾಮೀಯಾ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.