ನವದೆಹಲಿ (ಪಿಟಿಐ/ಐಎಎನ್ಎಸ್): ಕೇಂದ್ರೀಯ ವಿದ್ಯಾಲಯಗಳ ೬ರಿಂದ ೮ನೇ ತರಗತಿ ಪಠ್ಯದಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯಾಗಿ ಬೋಧಿಸುವ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎಚ್. ಎಲ್.ದತ್ತು ಅವರಿದ್ದ ಪೀಠದ ಮುಂದೆ ಹಾಜರಾದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, ಕೇಂದ್ರೀಯ ವಿದ್ಯಾಲಯಗಳಲ್ಲಿ ಜರ್ಮನ್ ಭಾಷೆಗೆ ಬದಲು ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಬೋಧಿಸುವ ನಿರ್ಧಾರದಿಂದ ಉಂಟಾದ ವಿವಾದದ ಕುರಿತು ಪ್ರಮಾಣಪತ್ರ ಸಲ್ಲಿಸುವುದಕ್ಕೆ ಅನುಮತಿ ಕೇಳಿದರು. ಇದಕ್ಕೆ ಅನುಮತಿ ನೀಡಿದ ಪೀಠವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಈ ವಿಷಯವಾಗಿ ಕೇಂದ್ರೀಯ ವಿದ್ಯಾಲಯ ವಿದ್ಯಾರ್ಥಿಗಳ ಪೋಷಕರ ತಂಡವೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೊಳಪಡಿಸಲು ನ. ೨೧ರಂದು ಕೋರ್ಟ್್ ಒಪ್ಪಿಕೊಂಡಿತ್ತು.
ಸ್ಮೃತಿ ವಿರುದ್ಧ ಯುಜಿಸಿ ಸದಸ್ಯ ಅನ್ಸಾರಿ ಕಿಡಿ
ನವದೆಹಲಿ (ಪಿಟಿಐ): ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸ್ಕೃತ ಭಾಷೆಯನ್ನು ಕಡ್ಡಾಯಗೊಳಿಸಲು ಹೊರಟಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ವಿರುದ್ಧ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸದಸ್ಯ ಎಂ.ಎಂ. ಅನ್ಸಾರಿ ಗುರುವಾರ ಬಹಿರಂಗವಾಗಿ ಹರಿ ಹಾಯ್ದಿದ್ದಾರೆ.
ಇರಾನಿ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿರುವ ಅನ್ಸಾರಿ ಅವರು ಮಾನವ ಸಂಪನ್ಮೂಲ ಖಾತೆ ಜವಾಬ್ದಾರಿಯನ್ನು ನಿಭಾಯಿಸಲು ಇರಾನಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಶಿಕ್ಷಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಂದೇ ಒಂದು ಯೋಜನೆಯನ್ನೂ ಅವರು ಘೋಷಿಸಿಲ್ಲ. ತಾರತಮ್ಯದಿಂದ ಕೂಡಿದ ವಿದ್ಯಾರ್ಥಿ ವೇತನ ಹಾಗೂ ಹೊಸ ಸಂಸ್ಥೆಗಳ ಸ್ಥಾಪನೆ ಘೋಷಣೆಯೊಂದನ್ನು ಬಿಟ್ಟು ಮತ್ತೇನನ್ನೂ ಮಾಡಲು ಅವರಿಗೆ ಸಾಧ್ಯವಾಗಿಲ್ಲ ಎಂದು ಅವರು ಹರಿಹಾಯ್ದಿದ್ದಾರೆ.
ಒಟ್ಟಾರೆ ಸಚಿವೆಯ ಸಾಧನೆ ತೃಪ್ತಿಕರವಾಗಿಲ್ಲ ಎಂದಿರುವ ಅನ್ಸಾರಿ, ತಮ್ಮ ಬಹಿರಂಗ ಟೀಕೆಯ ಪರಿಣಾಮ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದ್ದಾರೆ. ಅನ್ಸಾರಿ ಕಟುವಾದ ಟೀಕೆಗೆ ಪ್ರತಿಕ್ರಿಯಿಸಲು ಸಚಿವಾಲಯ ನಿರಾಕರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.