ನಾಗಪುರ(ಪಿಟಿಐ/ಐಎಎನ್ಎಸ್): ಮಹಾರಾಷ್ಟ್ರ ಮುಖ್ಯಮಂತ್ರಿ ಆಂಕಾಕ್ಷಿಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ದೇವೆಂದ್ರ ಫಡ್ನವೀಸ್ ಅವರು ಗುರುವಾರ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ.
ವಿದರ್ಭ ಭಾಗದ ಶಾಸಕ ಸುದೀರ್ ಮುಂಗಂಟಿವಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಗಡ್ಕರಿ ಅವರೇ ಸೂಕ್ತ ವ್ಯಕ್ತಿ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ ಬೆನ್ನಲ್ಲೇ ಫಡ್ನವೀಸ್ ಅವರು ಗಡ್ಕರಿ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
ದೀಪಾವಳಿ ಶುಭಾಷಯ ತಿಳಿಸಲು ಫಡ್ನವೀಸ್ ಅವರು ನಗರದ ಮಹಲ್ ಪ್ರದೇಶದಲ್ಲಿರುವ ನಿವಾಸದಲ್ಲಿ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಭಯ ನಾಯಕರ ನಡುವೆ ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಯಿತು. ಯಾವ ವಿಷಯದ ಬಗ್ಗೆ ಮಾತುಕತೆ ನಡೆಯಿತು ಎಂಬುದು ತಕ್ಷಣಕ್ಕೆ ತಿಳಿದಿಲ್ಲ ಎಂದು ಮೂಲಗಳು ಹೇಳಿವೆ.
ಗಡ್ಕರಿ ಸ್ಪಷ್ಟನೆ (ನವದೆಹಲಿ ವರದಿ): ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿ ತಾನು ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಹೇಳಿದ್ದಾರೆ.
‘ಈ ಸಂಬಂಧ ನಾನು ಈಗಾಗಲೇ ಸ್ಪಷ್ಟ ಪಡಿಸಿದ್ದೇನೆ. ದೆಹಲಿಯಲ್ಲಿಯೇ ಉಳಿಯಲು ನಾನು ಇಷ್ಟಪಡುತ್ತೇನೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.