ಲಖನೌ: ‘ಫೈಜಾಬಾದ್ನ ಸನ್ಯಾಸಿ ಗುಮ್ನಾಮಿ ಬಾಬಾ ಅವರೇ ನೇತಾಜಿ ಸುಭಾಷ್ಚಂದ್ರ ಬೋಸ್ ಆಗಿದ್ದರು ಎಂದು ಹೆಚ್ಚು ಜನ ನಂಬಿದ್ದರು’ ಎಂದು ನಿವೃತ್ತ ನ್ಯಾಯಮೂರ್ತಿ ವಿಷ್ಣು ಸಹಾಯ್ ಹೇಳಿದ್ದಾರೆ.
ಗುಮ್ನಾಮಿ ಬಾಬಾ ಬಗ್ಗೆ ಉತ್ತರ ಪ್ರದೇಶದ ರಾಜ್ಯಪಾಲ ರಾಮ್ ನಾಯಕ್ ಅವರಿಗೆ ವಿಷ್ಣು ಸಹಾಯ್ ಅವರು 347 ಪುಟಗಳ ವರದಿ ಸಲ್ಲಿಸಿದ್ದಾರೆ.
‘ಗುಮ್ನಾಮಿ ಬಾಬಾ ಅವರೇ ನೇತಾಜಿ ಆಗಿದ್ದರು’ ಎಂದು ವಾದಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಈ ಬಗ್ಗೆ ಆಯೋಗವೊಂದನ್ನು ರಚಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶ ನೀಡಿತ್ತು. ಹೈಕೋರ್ಟ್ ಆದೇಶದಂತೆ ಉತ್ತರ ಪ್ರದೇಶ ಸರ್ಕಾರ ಕಳೆದ ವರ್ಷ ಜೂನ್ನಲ್ಲಿ ವಿಷ್ಣು ಸಹಾಯ್ ಅವರ ನೇತೃತ್ವದಲ್ಲಿ ಆಯೋಗ ರಚಿಸಿತ್ತು.
‘ಆಯೋಗದ ಮುಂದೆ ಖುದ್ದಾಗಿ ಇಲ್ಲವೇ ಪತ್ರ ಮುಖೇನ ಮಾಹಿತಿ ನೀಡಿರುವ ಬಹುತೇಕರು ಗುಮ್ನಾಮಿ ಬಾಬಾ ಅವರೇ ನೇತಾಜಿ ಆಗಿದ್ದರು ಎಂದು ಹೇಳಿದ್ದಾರೆ. ಆಯೋಗಕ್ಕೆ ಮಾಹಿತಿ ನೀಡಿರುವ ಬಹುತೇಕರು ಗುಮ್ನಾಮಿ ಬಾಬಾ ಅವರೇ ನೇತಾಜಿ ಎಂದು ನಂಬಿದ್ದರು. ಕೆಲವರು ಅವರು ನೇತಾಜಿ ಆಗಿದ್ದಿರಬಹುದು ಎಂದು ಹೇಳಿದ್ದರು. ಕೆಲವರು ಅವರು ನೇತಾಜಿ ಆಗಿರಲಿಲ್ಲ ಎಂಬ ಹೇಳಿಕೆಯನ್ನೂ ನೀಡಿದ್ದಾರೆ’ ಎಂದು ವಿಷ್ಣು ಸಹಾಯ್ ಹೇಳಿದ್ದಾರೆ.
ರಾಜ್ಯಪಾಲರಿಗೆ ಸಲ್ಲಿಸಿರುವ ವರದಿಯ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ವಿಷ್ಣು ಸಹಾಯ್ ನಿರಾಕರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.