ADVERTISEMENT

ಜಯಾ ಅರ್ಜಿ ವಿಚಾರಣೆಗೆ ವಿಶೇಷ ಪೀಠ

ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2014, 19:30 IST
Last Updated 18 ಡಿಸೆಂಬರ್ 2014, 19:30 IST

ನವದೆಹಲಿ (ಪಿಟಿಐ): ಅಕ್ರಮ ಆಸ್ತಿ ಸಂಗ್ರಹಕ್ಕೆ ಸಂಬಂಧಿಸಿದ ಪ್ರಕರಣ­ದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ನಾಲ್ಕು ತಿಂಗಳು ಜಾಮೀನು ವಿಸ್ತರಿಸಿ ಸುಪ್ರೀಂ­ಕೋರ್ಟ್‌ ಆದೇಶ ಹೊರಡಿಸಿದೆ.

ತಮ್ಮನ್ನು ತಪ್ಪಿತಸ್ಥೆ ಎಂದು ಘೋಷಿಸಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಯಲಲಿತಾ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ವಿಶೇಷ ಪೀಠವೊಂದನ್ನು ಸ್ಥಾಪಿಸುವಂತೆಯೂ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ನ್ಯಾಯಪೀಠ ಸೂಚಿಸಿದೆ.

ನಿತ್ಯವೂ ವಿಚಾರಣೆ ನಡೆಸಿ ಮೂರು ತಿಂಗಳೊಳಗಾಗಿ ಈ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಮುಖ್ಯ­ನ್ಯಾಯಮೂರ್ತಿ ಎಚ್‌.ಎಲ್‌. ದತ್ತು ಹಾಗೂ ನ್ಯಾ. ಎ.ಕೆ. ಸಿಕ್ರಿ ಅವರನ್ನೊಳಗೊಂಡ ಪೀಠ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ.

ಜಯಲಲಿತಾ ಅವರಿಗೆ ಅಕ್ಟೋಬರ್‌ 17ರಂದು ನೀಡಿದ್ದ ಜಾಮೀನನ್ನು ಮತ್ತೂ ನಾಲ್ಕು ತಿಂಗಳು ಅಂದರೆ ಏಪ್ರಿಲ್‌ 18ರವರೆಗೆ ವಿಸ್ತರಿಸುವುದಾಗಿ ನ್ಯಾಯಪೀಠ ತಿಳಿಸಿತು.

ಮುಖ್ಯಾಂಶಗಳು
* ಜಯಾ ಜಾಮೀನು ಏಪ್ರಿಲ್‌ 18ರವರೆಗೆ ವಿಸ್ತರಣೆ
* ಕರ್ನಾಟಕಹೈಕೋರ್ಟ್‌ಗೆ ಸುಪ್ರೀಂಕೋರ್ಟ್‌ ಸೂಚನೆ
* 3 ತಿಂಗಳಲ್ಲಿ ಅರ್ಜಿ ಇತ್ಯರ್ಥಗೊಳಿಸು­ವಂತೆ ಹೈಕೋರ್ಟ್‌ಗೆ ನಿರ್ದೇಶನ

ಜಯಲಲಿತಾ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಕೆಟಿಎಸ್‌ ತುಳಸಿ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರಿಗೆ ನೀಡುವಂತೆ ಕೋರ್ಟ್‌ ಸೂಚಿಸಿತು.

ಅಕ್ರಮ ಆಸ್ತಿ ಸಂಗ್ರಹ ಪ್ರಕರಣದಲ್ಲಿ ಜಯಲಲಿತಾ ಅವರನ್ನು ತಪ್ಪಿತಸ್ಥೆ ಎಂದು ಘೋಷಿಸಿದ್ದ ವಿಶೇಷ ನ್ಯಾಯಾಲಯ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ₨ 100 ಕೋಟಿ ದಂಡ ವಿಧಿಸಿತ್ತು. ಸೆಪ್ಟೆಂಬರ್‌ 27ರಂದು ಜೈಲು ಸೇರಿದ್ದ ಜಯಲಲಿತಾ ಕರ್ನಾಟಕ ಹೈಕೋರ್ಟ್‌ ಜಾಮೀನು ನಿರಾಕರಿಸಿದ ಕಾರಣ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.