ADVERTISEMENT

ಜಯಾ ಜಾಮೀನು ವಿಸ್ತರಿಸಿದ ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2014, 9:21 IST
Last Updated 18 ಡಿಸೆಂಬರ್ 2014, 9:21 IST

ನವದೆಹಲಿ (ಪಿಟಿಐ): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ನೀಡಿದ್ದ ಷರತ್ತುಬದ್ಧ ಜಾಮೀನನ್ನು ಸುಪ್ರೀಂಕೋರ್ಟ್ ನಾಲ್ಕು ತಿಂಗಳಿಗೆ ವಿಸ್ತರಿಸಿದೆ.

ಪ್ರಕರಣದ ಮುಂದಿನ ವಿಚಾರಣೆಗೆ ವಿಶೇಷ ಪೀಠ ಸ್ಥಾಪಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿರುವ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರ ನೇತೃತ್ವದ ನ್ಯಾಯಪೀಠ, ಮುಂದಿನ ಮೂರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ. ಜಯಲಲಿತಾ ಅವರ ಜಾಮೀನನ್ನು 2015ರ ಏಪ್ರಿಲ್‌ 18ರವರೆಗೆ ವಿಸ್ತರಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್‌ 27ರಂದು ಜಯಲಲಿತಾ ಅವರಿಗೆ ನಾಲ್ಕು ವರ್ಷಗಳ ಜೈಲು ಮತ್ತು ರೂ.100 ಕೋಟಿ ದಂಡದ ಶಿಕ್ಷೆ ವಿಧಿಸಿತ್ತು. ವಿಶೇಷ ನ್ಯಾಯಾಲ­ಯದ ತೀರ್ಪನ್ನು ಹೈಕೋರ್ಟ್‌­ನಲ್ಲಿ ಪ್ರಶ್ನಿಸಿದ್ದ ಜಯಲಲಿತಾ, ಶಿಕ್ಷೆಯನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್‌ ಅವರ ಮನವಿಯನ್ನು ತಿರಸ್ಕರಿಸಿ, ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು.

ADVERTISEMENT

ಬಳಿಕ ಜಯಲಲಿತಾ, ಶಿಕ್ಷೆ ರದ್ದುಪಡಿಸುವಂತೆ ಅಕ್ಟೋಬರ್‌ 9ರಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ಅಕ್ಟೋಬರ್‌ 17ರಂದು ಜಯಲಲಿತಾ ಅವರಿಗೆ ಹಾಗೂ ವಿಭಾಗೀಯ ಪೀಠ ಪ್ರಕರಣದ ಉಳಿದ ಮೂರು ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್‌ಗೆ ಎರಡು ತಿಂಗಳೊಳಗೆ ‘ಪೇಪರ್‌ ಬುಕ್‌’ ಸಲ್ಲಿಸುವಂತೆ ಜಯಲಲಿತಾ ಪರ ವಕೀಲರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ನ್ಯಾಯಾಲಯದ ನಿರ್ದೇಶನದಂತೆ ಜಯಲಲಿತಾ ಪರ ವಕೀಲರು ಇತ್ತೀಚೆಗೆ ರಾಜ್ಯ ಹೈಕೋರ್ಟ್‌ಗೆ ‘ಪೇಪರ್‌ ಬುಕ್‌’ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.