ನವದೆಹಲಿ: ನೋಟು ಬದಲಾವಣೆಯ ಮಿತಿಯನ್ನು ₹4,500ರಿಂದ ₹2,000ಕ್ಕೆ ಇಳಿಸಿರುವ ಕೇಂದ್ರ ಸರ್ಕಾರ ತೀರ್ಮಾನವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ನೋಟು ಬದಲಾವಣೆಯ ಮಿತಿಯನ್ನು ₹2,000ಕ್ಕೆ ಇಳಿಸಿದ್ದು ಯಾಕೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು.
ಈ ರೀತಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜನರಿಗೆ ಇನ್ನಷ್ಟು ತೊಂದರೆ ನೀಡುತ್ತಿರುವುದು ಯಾಕೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಅದೇ ವೇಳೆ ಜನರ ಸಮಸ್ಯೆಗಳನ್ನು ನಿವಾರಿಸಲು ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.
ಒಬ್ಬ ವ್ಯಕ್ತಿ ದಿನವೊಂದಕ್ಕೆ ಬದಲಾವಣೆ ಮಾಡಬಹುದಾದ ಹಣದ ಮಿತಿಯನ್ನು ₹4,500 ರಿಂದ ₹2,000ಕ್ಕೆ ಇಳಿಸಿ ಗುರುವಾರ ಕೇಂದ್ರ ಆದೇಶ ಹೊರಸಿತ್ತು. ಈ ಆದೇಶ ಶುಕ್ರವಾರದಿಂದ ಜಾರಿಗೆ ಬಂದಿದೆ.
ಏತನ್ಮಧ್ಯೆ, ನೋಟು ರದ್ದು ತೀರ್ಮಾನದ ವಿರುದ್ಧ ವಿವಿಧ ಹೈಕೋರ್ಟ್ಗಳಲ್ಲಿ ಮತ್ತು ಇತರ ನ್ಯಾಯಾಲಯಗಳಲ್ಲಿ ಸಲ್ಲಿಸಲ್ಪಟ್ಟ ಅರ್ಜಿಗಳಿಗೆ ತಡೆ ನೀಡಿಬೇಕೆಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.
ಕೇಂದ್ರ ಸರ್ಕಾರ ನೋಟು ರದ್ದು ಮಾಡಿರುವ ತೀರ್ಮಾನದಿಂದ ಜನರು ಕಂಗಾಲಾಗಿದ್ದಾರೆ. ಆದ ಕಾರಣ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಈ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.