ನವದೆಹಲಿ(ಪಿಟಿಐ): ಪಂಜಾಬ್ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕುರಿತು ಪಾಕಿಸ್ತಾನದ ಅಣು ವಿಜ್ಞಾನಿ ಎ.ಕ್ಯು. ಖಾನ್ ನೀಡಿರುವ ಅಪಮಾನಕರ ಹೇಳಿಕೆ ಖಂಡಿಸಿ ಪಾಕಿಸ್ತಾನ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.
ಉಗ್ರರ ದಾಳಿ ಹಾಗೂ ಕಲಾಂ ಅವರ ಕುರಿತು ಎ.ಕ್ಯು. ಖಾನ್ ಹೇಳಿಕೆ ಖಂಡಿಸಿದ ಯುವ ಕಾಂಗ್ರೆಸ್ ಸದಸ್ಯರು ಪಾಕಿಸ್ತಾನ ಪ್ರಧಾನಮಂತ್ರಿ ಈ ಕುರಿತು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಾಕಿಸ್ತಾನವು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರಿಗೆ ಬೆಂಬಲ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಎ.ಕ್ಯು. ಖಾನ್ ‘ಕಲಾಂ ಸಾಮಾನ್ಯ ವಿಜ್ಞಾನಿ’ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಉಗ್ರರ ದಾಳಿ ಹಾಗೂ ಖಾನ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಭಾರತ ಸರ್ಕಾರವು ಪಾಕಿಸ್ತಾನದ ಜತೆಗಿನ ಸ್ನೇಹ ಸಂಬಂಧವನ್ನು ಕೊನೆಗೊಳಿಸಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.