ADVERTISEMENT

ಬಿಜೆಪಿ ಕಚೇರಿಯಲ್ಲಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2013, 20:13 IST
Last Updated 8 ಡಿಸೆಂಬರ್ 2013, 20:13 IST
ಬಿಜೆಪಿ ಮುಖ್ಯಮಂತ್ರಿ  ಅಭ್ಯರ್ಥಿ ಹರ್ಷವರ್ಧನ
ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಹರ್ಷವರ್ಧನ   

ನವದೆಹಲಿ (ಪಿಟಿಐ): ರಾಜಧಾನಿ ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿರುವ ಬಿಜೆಪಿ  ಕಚೇರಿಯಲ್ಲಿ ಭಾನುವಾರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

ಅಶೋಕ ರಸ್ತೆಯಲ್ಲಿರುವ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಕಚೇರಿಯಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ಜಮಾಯಿಸಿದ್ದ ಪಕ್ಷದ ನೂರಾರು ಕಾರ್ಯಕರ್ತರು ಪಕ್ಷದ ಪರವಾಗಿ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪಕ್ಷದ ಹಿರಿಯ ಮುಖಂಡ ಮುಖ್ತರ್ ಅಬ್ಬಾಸ್ ನಖ್ವಿ ಡೋಲು ಬಾರಿಸುವ ಮೂಲಕ ಕಾರ್ಯಕರ್ತರ ಆಚರಣೆಯಲ್ಲಿ ಭಾಗಿಯಾದರು. ಮುಖ್ಯಮಂತ್ರಿ ಅಭ್ಯರ್ಥಿ ಹರ್ಷವರ್ಧನ ಅವರ ಕೃಷ್ಣ ನಗರದ ನಿವಾಸದಲ್ಲಿ ಹಬ್ಬದ ವಾತಾವರಣ ಕಂಡುಬಂತು.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಭಾವಚಿತ್ರ ಮತ್ತು ಪೋಸ್ಟರ್‌ಗಳನ್ನು ಹಿಡಿದು ಕಾರ್ಯ­ಕರ್ತರು ಘೋಷಣೆಗಳನ್ನು ಕೂಗುತ್ತಿದ್ದ ದೃಶ್ಯ ಅಲ್ಲಲ್ಲಿ ಸಾಮಾನ್ಯವಾಗಿತ್ತು.

ಕಾಂಗ್ರೆಸ್ ಕಚೇರಿಯಲ್ಲಿ ಮೌನ: ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಇಳಿಯುವ ಮೂಲಕ ಹೀನಾಯ ಸೋಲನುಭವಿಸಿದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ರಾಜ್ಯ ಕಚೇರಿ ಹಾಗೂ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿತ್ತು.

ಮತದಾರರಿಗೆ ಧನ್ಯವಾದ
ನವದೆಹಲಿ (ಐಎಎನ್‌ಎಸ್‌): ಪಕ್ಷದ ಮೇಲೆ ವಿಶ್ವಾಸವಿಟ್ಟು ಚುನಾ­ವಣೆ­ಯಲ್ಲಿ ಬೆಂಬಲಿಸಿದ­ಕ್ಕಾಗಿ ಬಿಜೆಪಿ ಮುಖ್ಯಮಂತ್ರಿ  ಅಭ್ಯರ್ಥಿ ಹರ್ಷವರ್ಧನ ದೆಹಲಿ ಜನತೆಗೆ  ಧನ್ಯವಾದ ಸಲ್ಲಿಸಿದ್ದಾರೆ.

‘ಆಮ್‌ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್‌ ಮತ್ತು ಮಾಜಿ ಮುಖ್ಯ­ಮಂತ್ರಿ ಶೀಲಾ ದೀಕ್ಷಿತ್‌ ಅವರಿಗೂ ಹರ್ಷವರ್ಧನ್‌ ಧ್ಯನವಾದ ಸಲ್ಲಿಸಿದ್ದಾರೆ.

‘ನಿರೀಕ್ಷೆಗಿಂತಲೂ ಹೆಚ್ಚಾಗಿ ಸ್ಪರ್ಧೆ ನೀಡಿದ ಆಮ್‌ ಆದ್ಮಿ ಪಕ್ಷಕ್ಕೆ ನಾನು ಅಭಿ­ನಂದನೆ ಸಲ್ಲಿಸುತ್ತೇನೆ. ಅಲ್ಲದೇ, ಕಳೆದ 15 ವರ್ಷದಿಂದ ದೆಹಯಲ್ಲಿ ಜನ­ಸೇವೆ ಮಾಡಿದ್ದ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಅವರಿಗೆ ಧನ್ಯವಾದ ಅರ್ಪಿಸು­ತ್ತೇನೆ’ ಎಂದು ಹರ್ಷವರ್ಧನ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT