ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಮತ್ತು ಕೇಂದ್ರ ಸಚಿವೆ ಉಮಾ ಭಾರತಿ ಮೇ 30ರಂದು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.
‘ಮುಂದಿನ ವಾರದ ವಿಚಾರಣೆ ವೇಳೆ, ದೋಷಾರೋಪ ಹೊರಿಸುವ ಸಂದರ್ಭ ಆರೋಪಿಗಳು ಕಡ್ಡಾಯವಾಗಿ ನ್ಯಾಯಾಲಯದಲ್ಲಿ ಹಾಜರಿರಬೇಕು. ಯಾವುದೇ ರೀತಿಯ ವಿನಾಯಿತಿ ಕೇಳುವಂತಿಲ್ಲ’ ಎಂದು ಸಿಬಿಐ ನ್ಯಾಯಾಧೀಶರು ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಚು ಹೂಡಿದ ವಿಚಾರವಾಗಿ ಅಡ್ವಾಣಿ ಸೇರಿದಂತೆ 12 ಮಂದಿ ವಿರುದ್ಧ ಇರುವ ಆರೋಪವನ್ನು ಕಳೆದ ತಿಂಗಳು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್, ಆರೋಪಿಗಳ ವಿರುದ್ಧ ಒಂದು ತಿಂಗಳ ಒಳಗೆ ದೋಷಾರೋಪ ದಾಖಲಿಸುವಂತೆ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿತ್ತು. ಎರಡು ವರ್ಷಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿತ್ತು.
ಅಡ್ವಾಣಿ ಮತ್ತಿತರ ಇತರರ ವಿರುದ್ಧದ ಆರೋಪವನ್ನು 2001ರಲ್ಲಿ ಸಿಬಿಐ ನ್ಯಾಯಾಲಯ ರದ್ದುಪಡಿಸಿ ತೀರ್ಪು ಪ್ರಕಟಿಸಿತ್ತು. ಇದನ್ನು 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿತ್ತು. ಆದರೆ, ಕಳೆದ ತಿಂಗಳು ಸುಪ್ರೀಂ ಕೋರ್ಟ್ ಮತ್ತೆ ವಿಚಾರಣೆಗೆ ಆದೇಶಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.