ನವದೆಹಲಿ: ಪ್ರತಿಪಕ್ಷಗಳ ಸದಸ್ಯರು ಗದ್ದಲ ಸೃಷ್ಟಿಸಿದ್ದರಿಂದಾಗಿ ಲೋಕಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ. ಹೀಗಾಗಿ ಎನ್ಡಿಎ ಸರ್ಕಾರದ ವಿರುದ್ಧ ವೈಎಸ್ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಮಂಡಿಸಲು ಉದ್ದೇಶಿಸಿದ್ದ ಅವಿಶ್ವಾಸ ಗೊತ್ತುವಳಿ ಸೋಮವಾರವೂ ಮಂಡನೆಯಾಗಲಿಲ್ಲ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಮತ್ತು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಷಯಕ್ಕೆ ಸಂಬಂಧಿಸಿ ಟಿಡಿಪಿ, ವೈಎಸ್ಆರ್ ಕಾಂಗ್ರೆಸ್, ತೆಲಂಗಾಣ ರಾಷ್ಟ್ರ ಸಮಿತಿ, ಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ತೀವ್ರ ಗದ್ದಲ ಸೃಷ್ಟಿಸಿದ್ದಾರೆ. ಇದರಿಂದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಮಧ್ಯಾಹ್ನ 12 ಗಂಟೆಯ ವರೆಗೆ ಮುಂದೂಡಿದ್ದಾರೆ. ಆದರೆ, ಮತ್ತೆ ಗದ್ದಲ ಸೃಷ್ಟಿಯಾಗಿದ್ದರಿಂದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ.
‘ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ಕಲ್ಪಿಸುವುದು ನನ್ನ ಕರ್ತವ್ಯ. ಆದರೆ, ಸದನ ಸುವ್ಯವಸ್ಥಿತವಾಗುವಲ್ಲಿವರೆಗೆ ಏನೂ ಮಾಡಲಾಗದು’ ಎಂದು ಸುಮಿತ್ರಾ ಮಹಾಜನ್ ಹೇಳಿದರು.
‘ಅವಿಶ್ವಾಸ ಗೊತ್ತುವಳಿ ಬಗ್ಗೆ ಚರ್ಚೆಯಾಗುವುದನ್ನು ನಾವು ಬಯಸುತ್ತೇವೆ. ಚರ್ಚೆಯಲ್ಲಿ ಎಲ್ಲರೂ ಹಾಜರಿರುವಂತೆ ನಾವು ಮನವಿ ಮಾಡುತ್ತಿದ್ದೇವೆ’ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷಗಳು ಅವಿಶ್ವಾಸ ಗೊತ್ತುವಳಿಯನ್ನು ಬೆಂಬಲಿಸುವುದಾಗಿ ಹೇಳಿವೆ.
ಇನ್ನಷ್ಟು ಸುದ್ದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.