ನವದೆಹಲಿ: ವಿದೇಶದಲ್ಲಿ ಅಕ್ರಮ ಆಸ್ತಿ ಹೊಂದಿರುವ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ವಿಚಾರಣೆಗೆ ಆದೇಶಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಕಪ್ಪುಹಣ ಮತ್ತು ಬೇನಾಮಿ ಆಸ್ತಿಗೆ ಸಂಬಂಧಿಸಿದ ಹೊಸ ಕಾಯ್ದೆ ಪ್ರಕಾರ ಚಿದಂಬರಂ ವಿರುದ್ಧ ಕ್ರಮ ತೆಗೆದು ಕೊಳ್ಳಬೇಕು ಎಂದು ಪ್ರಧಾನಿ ಅವರಿಗೆ ಬರೆದಿರುವ ಪತ್ರದಲ್ಲಿ ಅವರು ಆಗ್ರಹಿಸಿದ್ದಾರೆ.
ಚಿದಂಬರಂ ಮತ್ತು ಅವರ ಕುಟುಂಬದ ಸದಸ್ಯರು ಲಂಡನ್, ಮಲೇಷ್ಯಾ, ಸಿಂಗಪುರ, ಶ್ರೀಲಂಕಾ, ಸ್ಪೇನ್, ಫ್ರಾನ್ಸ್ ಮತ್ತು ಗ್ರೀಸ್ನಲ್ಲಿ ಆಸ್ತಿ ಹೊಂದಿದ್ದಾರೆ. ಇದಲ್ಲದೇ ಚಿದಂಬರಂ ಪುತ್ರ ಕಾರ್ತಿ ಅವರು ಹೊರದೇಶಗಳಲ್ಲಿ 21 ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಅವುಗಳ ಮೂಲಕ ಅಕ್ರಮ ವ್ಯವಹಾರ ನಡೆಸಲಾಗುತ್ತಿದೆ ಎಂದು ಸ್ವಾಮಿ ಆಪಾದಿಸಿದ್ದಾರೆ.
ಆಪಾದನೆ ತಳ್ಳಿ ಹಾಕಿದ ಕಾರ್ತಿ: ತಮ್ಮ ಮತ್ತು ಕುಟುಂಬದ ಸದಸ್ಯರ ವಿರುದ್ಧ ಮಾಡಲಾಗಿರುವ ಆಪಾದನೆಗಳನ್ನು ಕಾರ್ತಿ ಅವರು ತಳ್ಳಿಹಾಕಿದ್ದಾರೆ.
ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಸುವಾಗ ಆಸ್ತಿ ವಿವರಗಳನ್ನು ಘೋಷಿಸಲಾಗಿದೆ. ಆದ್ದರಿಂದ ಯಾವುದೇ ರೀತಿಯ ಅಕ್ರಮ ಆಸ್ತಿ ಇಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.