ADVERTISEMENT

ವಿಧವೆಯರಿಗೆ ಕಾರ್ಯಕ್ರಮ: ಕರ್ನಾಟಕಕ್ಕೆ ‘ಸುಪ‍್ರೀಂ’ ತರಾಟೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 19:30 IST
Last Updated 6 ಡಿಸೆಂಬರ್ 2017, 19:30 IST

ನವದೆಹಲಿ: ವಿಧವೆಯರ ಕಲ್ಯಾಣ ಕಾರ್ಯಕ್ರಮಗಳ ಬಗೆಗಿನ ಪ್ರಶ್ನೆಗಳಿಗೆ ಉತ್ತರಿಸಲು ವಿಫಲವಾದ ಕರ್ನಾಟಕ ಮತ್ತು ಇತರ 11 ರಾಜ್ಯಗಳನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

‘ಲಿಂಗ ಸಮಾನತೆಯ ಬಗ್ಗೆ ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಮಹಿಳೆಯರ ಅಭಿವೃದ್ಧಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಕೇಂದ್ರ ಮತ್ತು ರಾಜ್ಯಗಳ ಸರ್ಕಾರಗಳಿಗೆ ಐದು ನಿಮಿಷ ಸಮಯ ಇಲ್ಲ. ಇಂತಹ ಮನೋಭಾವ ದೇಶದಲ್ಲಿ ಮಹಿಳೆಯರ ಹಕ್ಕುಗಳನ್ನು ಮುಂದಕ್ಕೆ ಒಯ್ಯುವುದಿಲ್ಲ’ ಎಂದು ನ್ಯಾಯಮೂರ್ತಿಗಳಾದ ಮದನ್‌ ಬಿ. ಲೋಕೂರ್‌ ಮತ್ತು ದೀಪಕ್‌ ಗುಪ್ತಾ ಅವರ ಪೀಠ ಹೇಳಿದೆ.

ಈ ರಾಜ್ಯಗಳನ್ನು ಪೀಠವು ತರಾಟೆಗೆ ತೆಗೆದುಕೊಂಡದ್ದು ಮಾತ್ರವಲ್ಲದೆ, ತಲಾ ₹2 ಲಕ್ಷ ದಂಡವನ್ನೂ ವಿಧಿಸಿದೆ. ಕೇಳಿದ ಪ್ರಶ್ನೆಗಳಿಗೆ ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡಲು ವಿಫಲವಾದರೆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳನ್ನು ನ್ಯಾಯಾಲಯಕ್ಕೆ ಕರೆಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ಪೀಠ ನೀಡಿದೆ.

ADVERTISEMENT

ಆಶ್ರಯಧಾಮಗಳಲ್ಲಿ ವಾಸಿಸುತ್ತಿರುವ ವಿಧವೆಯರಿಗೆ ನ್ಯಾಯ ಒದಗಿಸುವುದಕ್ಕಾಗಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಸಿದ್ಧಪಡಿಸಿರುವ ಯೋಜನೆಗೆ ಪ್ರತಿಕ್ರಿಯೆ ನೀಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.