ನವದೆಹಲಿ (ಪಿಟಿಐ): ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆಯ ವಿರೋಧಪಕ್ಷದ ನಾಯಕನ ಸ್ಥಾನಕ್ಕಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಈಗ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ.
ಲೋಕಸಭೆಯಲ್ಲಿ ದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ಲೋಕಸಭೆಯ ವಿರೋಧ ಪಕ್ಷ ನಾಯಕ ಸ್ಥಾನ ಪಡೆಯುವ ಎಲ್ಲ ಅರ್ಹತೆ ಹೊಂದಿದೆ ಎಂದು ಸೋನಿಯಾ ಸೋಮವಾರ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಈ ವಿಷಯದ ಕುರಿತು ಬಹಿರಂಗ ಪ್ರತಿಕ್ರಿಯೆ ನೀಡಿರುವ ಸೋನಿಯಾ, ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ಕಾರಣ ಸಹಜವಾಗಿ ಕಾಂಗ್ರೆಸ್ಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಬೇಕು ಎಂಬ ವಾದವನ್ನು ಮುಂದಿಟ್ಟಿದ್ದಾರೆ.
‘ಕಾನೂನು ಹೋರಾಟ ನಡೆಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಕಾಂಗ್ರೆಸ್ ವಕ್ತಾರ ಆನಂದ ಶರ್ಮಾ, ಪ್ರಜಾಪ್ರಭುತ್ವದಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಕಾಂಗ್ರೆಸ್ ಬಳಸಿಕೊಳ್ಳಲಿದೆ. ನ್ಯಾಯಾಲಯ ಮೆಟ್ಟಿಲೇರಲೂ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆಯ ವಿರೋಧಪಕ್ಷದ ನಾಯಕ ಸ್ಥಾನ ಪಡೆಯುವ ಅರ್ಹತೆ ಇಲ್ಲ. ಚುನಾವಣಾ ಸೋಲನ್ನು ಒಪ್ಪಿಕೊಳ್ಳಲು ಆ ಪಕ್ಷ ಇನ್ನೂ ಸಿದ್ಧವಿಲ್ಲ ಎಂಬ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ ಅವರು, ‘ನಮಗೆ ವಾಸ್ತವ ಅರಿವಿದೆ’ ಎಂದು ತಿರುಗೇಟು ನೀಡಿದ್ದಾರೆ.
ಈ ಕುರಿತು ಬೇಗನೆ ನಿರ್ಧಾರ ತೆಗೆದುಕೊಳ್ಳುವಂತೆ ಲೋಕಸಭಾ ಸ್ವೀಕರ್ ಸುಮಿತ್ರಾ ಮಹಾಜನ್ ಅವರಿಗೆ ಯುಪಿಎ ಸಂಸದರು ಪತ್ರ ಬರೆಯಲಿದ್ದಾರೆ ಎಂದು ಆನಂದ ಶರ್ಮಾ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.