ನವದೆಹಲಿ (ಪಿಟಿಐ): ವೀಸಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅಮೆರಿಕದಲ್ಲಿ ಬಂಧನಕ್ಕೊಳಗಾಗಿ ಭಾರಿ ಸುದ್ದಿ ಮಾಡಿದ್ದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರು ಟಿವಿ ಚಾನೆಲ್ವೊಂದಕ್ಕೆ ನೀಡಿರುವ ಸಂದರ್ಶನದ ಹೇಳಿಕೆಯಿಂದ ತೊಂದರೆ ಎದುರಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
‘ತಾವು ಸ್ವದೇಶಕ್ಕೆ ವಾಪಸ್ಸಾದ ನಂತರ ಬಂಧನದ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ, ಹೊಸ ಸರ್ಕಾರವು ರಾಜತಾಂತ್ರಿಕ ಅಧಿಕಾರಿ ವಿರುದ್ಧದ ನ್ಯಾಯಾಂಗ ಕ್ರಮವನ್ನು ಗಂಭೀರವಾಗಿ ಪರಿಗಣಿಸಬಹುದು ಎಂಬ ವಿಶ್ವಾಸ ಇದೆ’ ಎಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ವಿದೇಶಾಂಗ ಕಚೇರಿಯಲ್ಲಿ ನಿರ್ದೇಶಕರ ದರ್ಜೆಯ ಅಧಿಕಾರಿ ಆಗಿರುವ ದೇವಯಾನಿ ಅವರ ಹೇಳಿಕೆಯು ವೈಯಕ್ತಿಕ ವಾದುದು ಎಂದು ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಟಿವಿ ಸಂದರ್ಶನಕ್ಕೆ ಅವರು ಅನುಮತಿ ಪಡೆದಿದ್ದರೆ, ಅನುಮತಿ ನೀಡಲಾಗಿತ್ತೆ ಎಂಬ ಪ್ರಶ್ನೆಗೆ ಅವರು ‘ಇಲ್ಲ’ ಎಂದು ತಿಳಿಸಿದ್ದಾರೆ.
ಅಮೆರಿಕದಲ್ಲಿ ದಾಖಲಾಗಿರುವ ಪ್ರಕರಣವನ್ನು ಬಗೆಹರಿಸಲು ವಿದೇಶಾಂಗ ಇಲಾಖೆಯು ಬದಲಿ ಮಾರ್ಗವನ್ನು ಹುಡುಕುತ್ತಿರುವ ಸಂದರ್ಭದಲ್ಲಿ ದೇವಯಾನಿ ಹೇಳಿಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ಹಿರಿಯ ಅಧಿಕಾರಿಗಳು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳು ಇವೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕದ ಭಾರತದ ರಾಯಭಾರ ಕಚೇರಿಯಲ್ಲಿ ಉಪ ಕಾನ್ಸಲ್ ಜನರಲ್ ಆಗಿದ್ದ ದೇವಯಾನಿ ಅವರು ಮನೆಗೆಲಸದವಳ ವೀಸಾ ಬಗ್ಗೆ ತಪ್ಪು ಮಾಹಿತಿ ನೀಡಿದ ಕಾರಣಕ್ಕೆ ಕಳೆದ ವರ್ಷ ಬಂಧನಕ್ಕೊಳಗಾಗಿದ್ದರು. ನಂತರ 2.5 ಲಕ್ಷ ಡಾಲರ್ ಭದ್ರತೆ ನೀಡಿ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.