ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕೆ ಮತ್ತಷ್ಟು ಒತ್ತು ಕೊಡುವಂತೆ ಗ್ರಾಮೀಣ ಪ್ರದೇಶದ ಮನೆಗಳಲ್ಲಿ ನಿರ್ಮಾಣವಾಗುವ ಶೌಚಾಲಯಗಳಿಗೆ ನೀಡುವ ಸಹಾಯಧನವನ್ನು ಹೆಚ್ಚಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಹೊಂದಿದೆ. ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ನಿರ್ಮಾಣವಾಗುವ ಶೌಚಾಲಯಗಳಿಗೆ ನೀಡುವ ಹಣವನ್ನೂ ಹೆಚ್ಚಿಸಲು ಯೋಚಿಸಲಾಗಿದೆ.
ಶೌಚಾಲಯ ನಿರ್ಮಾಣ ಕಾರ್ಯಕ್ರಮವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಪ್ರತ್ಯೇಕಿಸುವ ನಿರ್ಧಾರವನ್ನೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಅವರು ಹೊಂದಿದ್ದಾರೆ. ಹಿಂದಿನ ಯುಪಿಎ ಸರ್ಕಾರ ಈ ಯೋಜನೆಯನ್ನು ಆರಂಭಿಸಿದ್ದು ಅದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಅವರು ಹೇಳಿದ್ದಾರೆ.
ಹೆಣ್ಣುಮಕ್ಕಳಿಗೆ ಶೌಚಾಲಯ: ಸೂಚನೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಹೇಳಿದಂತೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಶೌಚಾಲಯ ನಿರ್ಮಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ. ಸುರಕ್ಷತೆಗೆ ಕ್ರಮ: ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಗೊಳಿಸುವುದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವಾಲಯವು ರಾಜ್ಯಗಳಿಗೆ ಸೂಚನೆ ನೀಡಿದೆ. |
ಮನೆಯ ಶೌಚಾಲಯ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ರೂ 10 ಸಾವಿರದಿಂದ ರೂ 15 ಸಾವಿರಕ್ಕೆ ಹೆಚ್ಚಿಸುವ ಪ್ರಸ್ತಾವವನ್ನು ಸಿದ್ಧಪಡಿಸಲಾಗಿದೆ. ಶಾಲಾ ಶೌಚಾಲಯ ನಿರ್ಮಾಣಕ್ಕೆ ನೀಡುವ ಅನುದಾನವನ್ನು ರೂ 35 ಸಾವಿರದಿಂದ ರೂ 54 ಸಾವಿರಕ್ಕೆ, ಅಂಗನವಾಡಿ ಶೌಚಾಲಯಕ್ಕೆ ನೀಡುವ ಮೊತ್ತವನ್ನು ರೂ 8 ಸಾವಿರದಿಂದ ರೂ 20 ಸಾವಿರಕ್ಕೆ ಮತ್ತು ಸಮುದಾಯ ಶೌಚಾಲಯ ನಿರ್ಮಾಣಕ್ಕೆ ನೀಡುವ ಹಣವನ್ನು ರೂ 2 ಲಕ್ಷದಿಂದ ರೂ 6 ಲಕ್ಷಕ್ಕೆ ಏರಿಸುವ ಪ್ರಸ್ತಾವ ಸಿದ್ಧಪಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.