ನವದೆಹಲಿ (ಐಎಎನ್ಎಸ್): ಅರವಿಂದ ಕೇಜ್ರಿವಾಲ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಕೆಳಗಿಳಿಸುವ ಪ್ರಯತ್ನಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ‘ಮಾರ್ಚ್ 4ರಂದು ನಡೆಯುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು’ ಎಂದಿದ್ದಾರೆ.
‘ಪಕ್ಷದ ವಿಚಾರಗಳ ಬಗ್ಗೆ ಅಸಮಾಧಾನವಿದ್ದರೆ ಅಂಥವರು ಪಕ್ಷದೊಳಗೆ ಚರ್ಚಿಸುವುದು ಒಳ್ಳೆಯದೇ ಹೊರತು ಅದನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸರಿಯಲ್ಲ’ ಎಂದು ಸಿಂಗ್ ಹೇಳಿದ್ದಾರೆ.
‘ಪಕ್ಷದ ಹಿರಿಯ ಮುಖಂಡರು ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡರೆ ಹಾಗೂ ಪಕ್ಷದ ಘನತೆ ಕುಂದಿಸುವಂತೆ ಮಾತನಾಡಿದರೆ ಪಕ್ಷವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.
ಕೇಜ್ರಿವಾಲ್ ಅವರು ಏಕಕಾಲದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಸಂಚಾಲಕ ಹುದ್ದೆ ನಿಭಾಯಿಸುತ್ತಿರುವುದು, ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಷಯ ಹಾಗೂ ದೆಹಲಿಯ ಹೊರತಾಗಿ ಇತರ ರಾಜ್ಯಗಳಲ್ಲಿ ಎಎಪಿಯ ಪಾತ್ರ ಮತ್ತಿತರ ವಿಷಯಗಳ ಬಗ್ಗೆ ಪಕ್ಷದ ಮುಖಂಡರಲ್ಲಿ ಅಸಮಾಧಾನ ಉಂಟಾಗಿ ಭಿನ್ನಮತಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.