ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರ ಚುನಾವಣೆಯನ್ನು ಶಾಂತಿಯುತ ನಡೆಯಲು ಅವಕಾಶ ನೀಡಿದ ಕೀರ್ತಿಯು ರಾಜ್ಯದ ಜನತೆ, ಭದ್ರತಾ ಪಡೆಗಳು ಹಾಗೂ ಚುನಾವಣಾ ಆಯೋಗಕ್ಕೆ ಸಲ್ಲಬೇಕು ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರತಿಕ್ರಿಯಿಸಿದೆ.
‘ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪಾಕಿಸ್ತಾನ, ಉಗ್ರಗಾಮಿಗಳು ಹಾಗೂ ಪ್ರತ್ಯೇಕತಾವಾದಿ ಅವಕಾಶ ನೀಡಿದರು' ಎಂಬ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೆ ಕೇಂದ್ರ ಸರ್ಕಾರ ಈ ಹೇಳಿಕೆ ನೀಡಿದೆ.
'ನಮ್ಮನ್ನು ಯಾರಾದರು ಪ್ರಶ್ನಿಸಿದರೆ, ಜಮ್ಮು ಮತ್ತು ಕಾಶ್ಮೀರ ಚುನಾವಣೆಗೆ ರಾಜ್ಯದ ಜನತೆ, ಚುನಾವಣಾ ಆಯೋಗ ಹಾಗೂ ಭದ್ರತಾ ಪಡೆಗಳು ಅವಕಾಶ ನೀಡಿದವು ಎಂದೇ ನಾವು ಹೇಳಬೇಕಾಗುತ್ತದೆ. ವಿಧಾನಸಭೆ ಆಗಿರಲಿ ಅಥವಾ ಲೋಕಸಭೆ ಚುನಾವಣೆ ಆಗಿರಲಿ ಅವರು ಶ್ರದ್ಧೆ ಹಾಗೂ ಉತ್ಸಾಹದಿಂದ ಸುದೀರ್ಘ ಪ್ರಜಾತಾಂತ್ರಿಕ ಪ್ರಕ್ರಿಯೆಯ ಯಶಸ್ಸಿಗೆ ಶ್ರಮಿಸುತ್ತಾರೆ' ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಇದಕ್ಕೂ ಮೊದಲು ಬಿಜೆಪಿ ಮುಖಂಡ ಜಿ.ವಿ.ಎಲ್.ನರಸಿಂಹ ರಾವ್ ಅವರು 'ಸುಗಮ ಮತದಾನದ ಕೀರ್ತಿಗೆ ಜಮ್ಮು ಮತ್ತು ಕಾಶ್ಮೀರದ ಜನತೆ, ಚುನಾವಣಾ ಆಯೋಗ ಹಾಗೂ ಭದ್ರತಾ ಪಡೆಗಳು ಅರ್ಹರು' ಎಂದು ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.