ನವದೆಹಲಿ: ಸುಳ್ಳು ಸುದ್ದಿ ಸೃಷ್ಟಿಸುವ ಮತ್ತು ಹರಡುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ಸುಳ್ಳು ಸುದ್ದಿ ಪ್ರಕಟಿಸಿದ ಅಥವಾ ಪ್ರಸಾರ ಮಾಡಿದ ಆರೋಪ ಸಾಬೀತಾದರೆ, ಮೊದಲ ತಪ್ಪಿಗೆ ಆರು ತಿಂಗಳ ಮಟ್ಟಿಗೆ ಮತ್ತು ಎರಡನೇ ಬಾರಿಯ ತಪ್ಪಿಗೆ ಒಂದು ವರ್ಷದ ಮಟ್ಟಿಗೆ ಮಾನ್ಯತೆ ರದ್ದು ಮಾಡಲಾಗುವುದು. ಮೂರನೇ ಬಾರಿಗೆ ತಪ್ಪು ಮಾಡಿದಲ್ಲಿ ಶಾಶ್ವತವಾಗಿ ಮಾನ್ಯತೆ ರದ್ದು ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿ ಸುಳ್ಳು ಸುದ್ದಿಗಳ ಕುರಿತು ನಿರ್ಣಯ ಕೈಗೊಳ್ಳುವ ಹೊಣೆಯನ್ನು ಭಾರತೀಯ ಪತ್ರಿಕಾ ಮಂಡಳಿಗೆ (ಪಿಸಿಐ) ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳ ಕುರಿತು ನಿರ್ಣಯ ಕೈಗೊಳ್ಳುವ ಹೊಣೆಯನ್ನು ಸುದ್ದಿ ಪ್ರಸಾರಕರ ಸಂಘಟನೆಗೆ (ನ್ಯೂಸ್ ಬ್ರಾಡ್ಕಾಸ್ಟರ್ಸ್ ಅಸೋಸಿಯೇಷನ್/ಎನ್ಬಿಎ) ವಹಿಸಲಾಗುವುದು. ಈ ಸಂಸ್ಥೆಗಳು 15 ದಿನಗಳ ಒಳಗೆ ನಿರ್ಣಯ ಕೈಗೊಳ್ಳಬೇಕೆಂದು ನಿರೀಕ್ಷಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಆರೋಪ ದಾಖಲಾದ ತಕ್ಷಣ ವಿಚಾರಣೆ ಪೂರ್ಣಗೊಳ್ಳುವವರೆಗೆ ಅನ್ವಯವಾಗುವಂತೆ ಆರೋಪಿ ಪತ್ರಕರ್ತರ ಮಾನ್ಯತೆಯನ್ನು ಅಮಾನತಿನಲ್ಲಿಡಲಾಗುತ್ತದೆ ಎಂದೂ ತಿಳಿಸಲಾಗಿದೆ.
ಯಾವುದೇ ಸುದ್ದಿ ಮಾಧ್ಯಮ ಸಂಸ್ಥೆಯ ಮಾನ್ಯತಾ ಮನವಿಗೆ ಸಂಬಂಧಿಸಿ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ (ಪಿಐಬಿ) ಮಾನ್ಯತಾ ಸಮಿತಿಯು ನಿರ್ಧಾರ ಕೈಗೊಳ್ಳುತ್ತದೆ. ಈ ಸಮಿತಿ ಪಿಸಿಐ ಮತ್ತು ಎನ್ಬಿಎ ಪ್ರತಿನಿಧಿಗಳನ್ನೂ ಒಳಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.