ADVERTISEMENT

‘ಹೆದ್ದಾರಿ ಡಿನೋಟಿಫೈ: ಸುಪ್ರೀಂ ಆದೇಶ ಪರಿಶೀಲಿಸಿ ಕ್ರಮ’

​ಪ್ರಜಾವಾಣಿ ವಾರ್ತೆ
Published 24 ಜುಲೈ 2017, 19:30 IST
Last Updated 24 ಜುಲೈ 2017, 19:30 IST

ನವದೆಹಲಿ: ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವುದಕ್ಕೆ ಅನುಮತಿ ಕೋರಿ ರಾಜ್ಯಗಳು ಮನವಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಪರಿಶೀಲಿಸಿದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರದ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.

‘ರಾಷ್ಟ್ರೀಯ ಹೆದ್ದಾರಿ ಪಕ್ಕದ 500 ಮೀಟರ್‌ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿರುವ ಸುಪ್ರೀಂ ಕೋರ್ಟ್‌, ಪಂಜಾಬ್‌ನ ಚಂಡೀಗಡದ ಸ್ಥಳೀಯ ಸಂಸ್ಥೆಯು ರಾಜ್ಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿ ಕೈಗೊಂಡ ನಿರ್ಧಾರವನ್ನು ಸಮರ್ಥಿಸಿದೆ. ಕೋರ್ಟ್‌ ನಿರ್ದೇಶನವನ್ನು ಅಭ್ಯಸಿಸಿದ ಬಳಿಕ ರಾಜ್ಯಗಳ ಮನವಿಗೆ ಪ್ರತಿಕ್ರಿಯೆ ನೀಡಲಾಗುವುದು’ ಎಂದು ತಿಳಿಸಿದರು.

ಆಯಾ ರಾಜ್ಯ ಸರ್ಕಾರಗಳೇ ರಾಜ್ಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿ ಜಿಲ್ಲಾ ಅಥವಾ ಸ್ಥಳೀಯ ಸಂಸ್ಥೆಯ ರಸ್ತೆಯನ್ನಾಗಿ ಘೋಷಿಸಬಹುದಾಗಿದೆ. ರಾಷ್ಟ್ರೀಯ ಹೆದ್ದಾರಿಗಳನ್ನು ಕೇಂದ್ರ ಸರ್ಕಾರವೇ ಡಿನೋಟಿಫೈ ಮಾಡಬೇಕಿದೆ. ಕರ್ನಾಟಕ  ಸೇರಿದಂತೆ ದೇಶದ ಅನೇಕ ರಾಜ್ಯಗಳು ಈ ಕುರಿತು ಮನವಿ ಸಲ್ಲಿಸಿವೆ ಎಂದು ಅವರು ಹೇಳಿದರು.

ADVERTISEMENT

ಹೆದ್ದಾರಿಗಳ ಪಕ್ಕದ 500 ಮೀಟರ್‌ ವ್ಯಾಪ್ತಿಯಲ್ಲಿನ ಮದ್ಯದ ಅಂಗಡಿಗಳನ್ನು ಸಂಚಾರದ ಸುರಕ್ಷತೆ ನಿಟ್ಟಿನಲ್ಲಿ ಬಂದ್‌ ಮಾಡುವಂತೆ ಸುಪ್ರೀಂ ಕೋರ್ಟ್‌ ಕಳೆದ ಡಿಸೆಂಬರ್‌ನಲ್ಲಿ ಆದೇಶ ನೀಡಿದೆ.

ಈ ಆದೇಶದ ನಂತರ ಚಂಡೀಗಡದ ನಗರ ಪಾಲಿಕೆಯು ನಗರ ವ್ಯಾಪ್ತಿಯಲ್ಲಿನ  ರಾಜ್ಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿ ಮದ್ಯದ ಅಂಗಡಿಗಳನ್ನು ಮುಂದುವರಿಸಲು ಅವಕಾಶ ಮಾಡಿಕೊಟ್ಟಿತ್ತು. ಈ ಕ್ರಮವನ್ನು ಪ್ರಶ್ನಿಸಿ ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಸ್ಥಳೀಯ ಸಂಸ್ಥೆಯ ಕ್ರಮವನ್ನು ಸ್ವಾಗತಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.