ಅಲೀಗಡ (ಪಿಟಿಐ): ಧರ್ಮ ಜನಜಾಗರಣ ಸಮಿತಿ ಡಿಸೆಂಬರ್ 25ರಂದು ಆಯೋಜಿಸಿದ್ದ ಮತಾಂತರ ಕಾರ್ಯಕ್ರಮ ರದ್ದುಗೊಳಿಸಿದ್ದರೂ ನಗರದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಧರ್ಮ ಜನಜಾಗೃತಿ ಸಮಿತಿ ನಿರ್ಧಾರವನ್ನು ಜಿಲ್ಲಾಧಿಕಾರಿ ಅಭಿಷೇಕ್ ಪ್ರಕಾಶ ಸ್ವಾಗತಿಸಿದ್ದು, ಕ್ರಿಸ್ಮಸ್ ಮುಗಿಯುವವರೆಗೂ ಬಂದೋಬಸ್ತ್ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
‘ಅಶಾಂತಿಗೆ ಕಾರಣವಾಗುವ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡುವುದಿಲ್ಲ’ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಉದ್ದೇಶಿತ ‘ಘರ್ ವಾಪಸಿ (ಮತಾಂತರ ಕಾರ್ಯಕ್ರಮ)’ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಧರ್ಮ ಜನಜಾಗೃತಿ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಸತ್ಯ ಪ್ರಕಾಶ ನೌಮನ್ ಮಂಗಳವಾರ ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.