ನವದೆಹಲಿ (ಪಿಟಿಐ): ‘ಈಗ ಮಾತ್ರವಲ್ಲ, ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ ಮುಸ್ಲಿಮರು ಪರಕೀಯರು ಎಂಬ ಭಾವನೆಯಲ್ಲೇ ಬದುಕುತ್ತಿದ್ದಾರೆ’ ಎಂದು ಕೆಂದ್ರದ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವೆ ನಜ್ಮಾ ಹೆಪ್ತುಲ್ಲಾ ತಿಳಿಸಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಹೀಗೆ ಅಭಿಪ್ರಾಯ ಪಟ್ಟಿದ್ದಾರೆ.
ಬಿಜೆಪಿ ಸರ್ಕಾರವಿದ್ದಾಗ ಅಲ್ಪಸಂಖ್ಯಾತರಿಗೆ ಭದ್ರತೆ ಇರುವುದಿಲ್ಲ ಎಂಬುದನ್ನು ಅವರು ಅಲ್ಲಗಳೆದರು. ಈಗ ಮಾತ್ರವಲ್ಲ ಸ್ವಾತಂತ್ರ್ಯನಂತರದಿಂದಲೂ ಮುಸ್ಲಿಮರು ಪರಕೀಯರೆಂಬ ಭಾವನೆಯಲ್ಲೇ ಇದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಮಾಡಿದ ಯೋಜನೆಗಳು ಮತ್ತು ಮಸೂದೆಗಳೇ ಕಾರಣ ಎಂದರು.
ಮುಸ್ಲಿಮರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಅಂಶವೇ ಅವರನ್ನು ಪರಕೀಯ ಭಾವನೆಗೆ ತಳ್ಳಿದೆ ಎಂದು ನಜ್ಮಾ ಹೆಫ್ತುಲ್ಲಾ ಅಭಿಪ್ರಾಯಪಟ್ಟರು.
ಇಲ್ಲಿಯವರೆಗೂ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಕೇವಲ ‘ಬಾಯಿ ಮಾತಿನಲ್ಲಿ’ ಬೆಂಬಲ ನೀಡುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸುವ ಮೂಲಕ ಅವರಲ್ಲಿನ ಪರಕೀಯ ಭಾವನೆಯನ್ನು ದೂರ ಮಾಡಲು ಯತ್ನಿಸುತ್ತಿದೆ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.