ADVERTISEMENT

ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 19:30 IST
Last Updated 19 ಜುಲೈ 2017, 19:30 IST

ಬೆಂಗಳೂರು: ಎಂಜಿನಿಯರಿಂಗ್‌ ಪದವಿಯ ಅಂತಿಮ ಸೆಮಿಸ್ಟರ್‌ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಇಬ್ಬರು ವಿದ್ಯಾರ್ಥಿಗಳು ಕೆಪಿಎಸ್‌ಸಿ ಮುಖಾಂತರ ನೇಮಕಗೊಳ್ಳುವ ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಹೈಕೋರ್ಟ್‌ ಅವಕಾಶ ಕಲ್ಪಿಸಿದೆ.

ಈ ಕುರಿತಂತೆ ಕೆಪಿಎಸ್‌ಸಿ ಅಧಿಸೂಚನೆ ಪ್ರಶ್ನಿಸಿ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ರಚಿತಾ ಕೆ.ಗೌಡ ಹಾಗೂ ಮೈಸೂರಿನ ಎಸ್‌. ಮೇಘ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪುರಸ್ಕರಿಸಿದೆ.

‘ಈ ಆದೇಶವು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಒಂದು ವೇಳೆ ಅರ್ಜಿದಾರರು ಫೇಲಾದರೆ ಕೋರ್ಟ್‌ಗೆ ಕೆಪಿಎಸ್‌ಸಿ ಮೆಮೊ ಸಲ್ಲಿಸಲು ಮುಕ್ತವಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ADVERTISEMENT

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 889 ಎಂಜಿನಿಯರ್‌ ಹುದ್ದೆಗಳ ನೇಮಕಕ್ಕೆ 2017ರ ಜೂನ್‌ 22ರಂದು ಅಧಿಸೂಚನೆ ಹೊರಡಿಸಿದ್ದು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಅಧಿಸೂಚನೆಯಲ್ಲಿ ‘ಅಂತಿಮ ವರ್ಷದ ಬಿ.ಇ.ಪದವಿ ಪರೀಕ್ಷೆ ಬರೆದು ಫಲಿತಾಂಶ ನಿರೀಕ್ಷೆ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ’ ಎಂಬ ಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅರ್ಜಿ ಸಲ್ಲಿಕೆಗೆ ಇದೇ 22 ಕಡೆ ದಿನ
ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಮತ್ತು ಕಿರಿಯ ಎಂಜಿನಿಯರ್‌ ದರ್ಜೆಯ ಒಟ್ಟು 889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಿವಿಲ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್ ವಿಭಾಗದ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.