ಆಲಮಟ್ಟಿ: ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯದ ಹಿನ್ನೀರಿನ ಜಾಕ್ವೆಲ್ಗಳಿಗೆ ಬುಧವಾರ ಸಂಜೆಯಿಂದ 35,000 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
‘ಎರಡು ದಿನಗಳ ಕಾಲ ನೀರು ಬಿಡಲಾಗುವುದು. ನಾರಾಯಣಪುರ ಜಲಾಶಯದ ನೀರಿನ ಮಟ್ಟ ಡೆಡ್ ಸ್ಟೋರೆಜ್ ಮಟ್ಟಕ್ಕಿಂತ ಕಡಿಮೆಯಾಗಿರುವುದರಿಂದ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಆದೇಶದಂತೆ ನೀರು ಹರಿಸಲಾಗುತ್ತಿದೆ’ ಎಂದು ಆಲಮಟ್ಟಿ ಅಣೆಕಟ್ಟು ವೃತ್ತದ ಸೂಪರಿಂಟೆಂಡಿಂಗ್ ಎಂಜಿನಿಯರ್ ಎಸ್.ಎಚ್. ಮಂಜಪ್ಪ ತಿಳಿಸಿದರು.
‘ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಒಂದು ವಾರ ನೀರು ಹರಿದು ಬರುವ ನಿರೀಕ್ಷೆ ಇದೆ. ಇದರಿಂದಾಗಿ ಭರ್ತಿಗೆ ಮುನ್ನವೇ ಜಲಾಶಯದ ನೀರು ಹರಿಸಲಾಗುತ್ತಿದ್ದು, ಸದ್ಯ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುದಾಗಾರದ ಮೂಲಕ ನೀರನ್ನು ಹರಿಸಲಾಗುತ್ತಿದೆ’ ಎಂದು ಹೇಳಿದರು.
ಅರ್ಧವೂ ಭರ್ತಿಯಾಗದ ಜಲಾಶಯ: ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಿದ್ದರೂ, 123 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಬುಧವಾರ 54 ಟಿಎಂಸಿ ಅಡಿ ನೀರು ಇತ್ತು. 519.60 ಮೀ. ಗರಿಷ್ಠ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 513.90 ಮೀ. ನೀರು ಸಂಗ್ರಹವಾಗಿದೆ. ಒಳಹರಿವಿನ ಪ್ರಮಾಣ ಬುಧವಾರ 38,452 ಕ್ಯುಸೆಕ್ ಇದ್ದು, ಒಂದೇ ದಿನದಲ್ಲಿ 3.32 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ವಿದ್ಯುತ್ ಉತ್ಪಾದನೆ ಆರಂಭ: ಜಲಾಶಯದ ಹೊರಹರಿವು ಆರಂಭವಾಗಿದ್ದರಿಂದ, ಮಾರ್ಚ್ನಿಂದ ಸ್ಥಗಿತಗೊಂಡಿದ್ದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಈಗ ಮತ್ತೆ ವಿದ್ಯುತ್ ಉತ್ಪಾದನೆ ಆರಂಭಗೊಂಡಿದೆ.
ನಾಲ್ಕು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಬುಧವಾರ ಸಂಜೆಯವರೆಗೆ 170 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಿದೆ ಎಂದು ಕೆಪಿಸಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಬಿ. ಬಿಸ್ಲಾಪುರ ತಿಳಿಸಿದರು. ಒಟ್ಟು ಆರು ಘಟಕಗಳಿಂದ 290 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಈ ಘಟಕಕ್ಕಿದೆ.
-ಚಂದ್ರಶೇಖರ ಕೋಳೇಕರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.