ADVERTISEMENT

ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ: 13ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2018, 11:30 IST
Last Updated 9 ಜೂನ್ 2018, 11:30 IST
ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ: 13ಕ್ಕೆ ಮುಂದೂಡಿಕೆ
ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ: 13ಕ್ಕೆ ಮುಂದೂಡಿಕೆ   

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಕಾಂಗ್ರೆಸ್‌ ಪದಾಧಿಕಾರಿಗಳು ರಾಜೀನಾಮೆ ನೀಡುವುದನ್ನು ಜೂನ್‌ 13ಕ್ಕೆ ಮುಂದೂಡಿದ್ದಾರೆ.

‘ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿನ ರಾಜಕೀಯ ಬಿಕ್ಕಟ್ಟಿನ ಕುರಿತು ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಎಂ.ಬಿ. ಪಾಟೀಲ ಅವರನ್ನು ಪಕ್ಷದ ಹೈಕಮಾಂಡ್‌ ಶುಕ್ರವಾರ ಸಂಜೆ ದಿಢೀರ್‌ ದೆಹಲಿಗೆ ಕರೆಸಿಕೊಂಡಿದೆ. ನಾವು ಕೆಪಿಸಿಸಿ ಕಚೇರಿಗೆ ಶನಿವಾರ ಹೋದರೆ ಪಕ್ಷದ ನಾಯಕರು ಸಿಗುವುದಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಅನಿವಾರ್ಯವಾಗಿ ಮುಂದೂಡಿದ್ದೇವೆ’ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

‘ಜೂನ್‌ 13ರಂದು ಬೆಂಗಳೂರಿನಲ್ಲಿ ಪಕ್ಷದ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಈ ಸಭೆಗೆ ರಾಜ್ಯ ಉಸ್ತುವಾರಿ ವೇಣುಗೋಪಾಲ ಹಾಗೂ ರಾಜ್ಯದ ಎಲ್ಲ ಮುಖಂಡರು ಬರುತ್ತಾರೆ. ಹೀಗಾಗಿ ಜಿಲ್ಲೆಯಿಂದ ಬಸ್‌ಗಳಲ್ಲಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕಾಂಗ್ರೆಸ್‌ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ತೆರಳಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ನಮ್ಮ ಅಸಮಾಧಾನವನ್ನು ಮುಖಂಡರ ಎದುರು ತೋಡಿಕೊಳ್ಳುತ್ತೇವೆ. ಶಾಮನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಡ ಹಾಕುತ್ತೇವೆ’ ಎಂದು ಮಂಜಪ್ಪ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.