ಮಾಗಡಿ: 'ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಸ್ವಯಂಪ್ರೇರಣೆಯಿಂದ ನನ್ನೊಂದಿಗೆ ಚರ್ಚಿಸಿದ್ದಾರೆ. ಆದರೆ, ಸ್ಥಳೀಯ ಮುಖಂಡರ ಒಮ್ಮತದ ಅಭಿಪ್ರಾಯ ಇದ್ದರೆ ಮಾತ್ರ ಸೇರಿಸಿಕೊಳ್ಳಲಾಗುವುದು’ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ಮುಖಂಡರು, ಸ್ಥಳೀಯ ಕಾರ್ಯಕರ್ತರು ಬೆಂಬಲ ನೀಡದಿದ್ದರೆ ಬೇರೆ ಯಾವ ಪಕ್ಷದ ಮುಖಂಡರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ನಮಗೆ ವಿರೋಧ ಪಕ್ಷಗಳ ನಾಯಕರ ಅಗತ್ಯವಿಲ್ಲ’ ಎಂದರು.
ರಾಹುಲ್ ಗಾಂಧಿ ಅವರು ಮಾಗಡಿಯಲ್ಲಿ ಏ.4ರಂದು ರೋಡ್ ಶೋ ನಡೆಸಿದ ನಂತರ ಕೋಟೆ ಬಯಲಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಎಚ್.ಸಿ.ಬಾಲಕೃಷ್ಣ ಮಾತನಾಡಿ, ‘ತಾಲ್ಲೂಕಿನಲ್ಲಿ ಹಳೆ ಮತ್ತು ಹೊಸ ಕಾಂಗ್ರೆಸ್ಸಿಗರು ಎಂಬ ಭೇದವಿಲ್ಲದೆ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ’ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಕಾಂಗ್ರೆಸ್ ಪಕ್ಷದ ಕಮಲಮ್ಮ, ಪುರಸಭೆ ಅಧ್ಯಕ್ಷ ಎಚ್.ಆರ್.ಮಂಜುನಾಥ್, ರಾಜ್ಯ ಬೆಸ್ಕಾಂ ನಿರ್ದೇಶಕ ಬಿ.ವಿ.ಜಯರಾಮು, ಸಿ.ಜಯರಾಮ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.