ADVERTISEMENT

ಕಾವೇರಿ: ನಿತ್ಯ ನೀರು ಬಿಡುವ ಆದೇಶ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2017, 19:30 IST
Last Updated 21 ಮಾರ್ಚ್ 2017, 19:30 IST
ನವದೆಹಲಿ: ಕಾವೇರಿ ಜಲವಿವಾದ ನ್ಯಾಯಮಂಡಳಿ ನೀಡಿರುವ ಐತೀರ್ಪನ್ನು ಪ್ರಶ್ನಿಸಿ ಕಣಿವೆ ವ್ಯಾಪ್ತಿಯ ರಾಜ್ಯಗಳು ಸಲ್ಲಿಸಿರುವ ಸಿವಿಲ್‌ ಅರ್ಜಿಗಳ ಅಂತಿಮ ವಿಚಾರಣೆಯನ್ನು ಜುಲೈ 11ರಿಂದ ಆರಂಭಿಸಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ.
 
ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2,000 ಕ್ಯುಸೆಕ್‌ ನೀರು ಹರಿಸುವಂತೆ ಕಳೆದ ಜ.4ರಂದು ನೀಡಿರುವ ಆದೇಶವನ್ನು ಮುಂದುವರಿಸುವಂತೆ ಸೂಚಿಸಿತು.
 
ಕರ್ನಾಟಕ ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಅವುಗಳಿಗೂ ತಡೆ ನೀಡಬೇಕು ಎಂದು ತಮಿಳುನಾಡು ಪರ ವಕೀಲ ಶೇಖರ್‌ ನಾಫಡೆ ಕೋರಿದರು.
 
‘ಕರ್ನಾಟಕವು ನಿತ್ಯ 2,000 ಕ್ಯುಸೆಕ್‌ ನೀರು ಬಿಡುವಂತೆ ಕೋರ್ಟ್‌ ನೀಡಿರುವ ಆದೇಶ ಪಾಲಿಸಿಲ್ಲ. ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಏಪ್ರಿಲ್‌ ಮಧ್ಯಭಾಗದಲ್ಲಿ ನೀರು ಹರಿಸುವಂತೆ ಸೂಚಿಸಬೇಕು’ ಎಂದು ನಾಫಡೆ ಕೋರ್ಟ್‌ಗೆ ಮನವಿ ಮಾಡಿದರು.
 
‘ಕೋರ್ಟ್‌ ಆದೇಶವನ್ನು ಕರ್ನಾಟಕ ಪಾಲಿಸಿದೆ. ತೀವ್ರ ಬರ ಆವರಿಸಿದೆ. ಕುಡಿಯಲು ನಮಗೇ ನೀರಿಲ್ಲ. ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಅಸಾಧ್ಯ’ ಎಂದು ಕರ್ನಾಟಕ ಪರ ವಕೀಲ ಫಾಲಿ ನಾರಿಮನ್‌ ವಿವರಿಸಿದರು. ಜುಲೈ 11ರಿಂದ ವಾರದಲ್ಲಿ ಮೂರು ದಿನಗಳಂತೆ 15 ದಿನಗಳವರೆಗೆ ಪ್ರಕರಣದ ವಿಚಾರಣೆ ನಡೆಸಲು ಪೀಠ ನಿರ್ಧರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.