ಬೆಳಗಾವಿ: ಗ್ರಾಮ ಪಂಚಾಯಿತಿಗಳ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸುವ ಪ್ರಸ್ತಾವ ಇಲಾಖೆ ಮುಂದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಎಚ್.ಕೆ.ಪಾಟೀಲ ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ನ ಎಂ.ನಾರಾಯಣ ಸ್ವಾಮಿ ಶುಕ್ರವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಪಂಪ್ ಆಪರೇಟರ್ಗಳಿಗೆ, ಸ್ವಚ್ಛತಾಗಾರರಿಗೆ ಕನಿಷ್ಟ ವೇತನ ನೀಡಬೇಕು ಎಂದು ಈಗಾಗಲೇ ಸುತ್ತೋಲೆ ಕಳುಹಿಸಿದ್ದೇವೆ. ಇದನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಗುತ್ತಿಗೆ ನೌಕರರಿಗೂ ವೇತನದ ಶೇ 10ರಷ್ಟು ಭವಿಷ್ಯ ನಿಧಿಯ ಪಾಲು ನೀಡುವುದಕ್ಕೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.
‘ರಾಷ್ಟ್ರಕಟ್ಟುವ ಕಾರ್ಯದಲ್ಲಿ ಪಂಚಾಯಿತಿ ನೌಕರರು ಸದಾ ನಮ್ಮ ಜೊತೆ ಇದ್ದಾರೆ. ಸ್ವಚ್ಛತಾ ಕಾರ್ಯಕ್ರಮ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಗಳಲ್ಲಿ ಇಲಾಖೆ ನಿಗದಿಪಡಿಸಿದ ಗುರಿ ಸಾಧಿಸುವಲ್ಲಿ ಅವರ ಕೊಡುಗೆ ಮಹತ್ವದ್ದು. ಅವರಿಗೆ ಹೆಚ್ಚಿನ ಸೇವಾ ಭದ್ರತೆ ಒದಗಿಸಲು ಇಲಾಖೆ ಬದ್ಧವಾಗಿದೆ’ ಎಂದರು.
‘ಪಂಚಾಯಿತಿ ನೌಕರರಿಗೂ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸಲಾಗುತ್ತಿದೆ. ಈ ಕುರಿತ ಪ್ರಸ್ತಾವ ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.