ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ (ಎರಡನೇ ತಿದ್ದುಪಡಿ) ಮಸೂದೆ 2015ನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಆದರೆ, ಅಧಿಕಾರ ವಿಕೇಂದ್ರೀಕರಣದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾದ ಈ ಮಸೂದೆಯ ಬಗ್ಗೆ ಯಾವುದೇ ಚರ್ಚೆ ನಡೆಯಲಿಲ್ಲ!
ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಆಂಜನೇಯ ರಾಜೀನಾಮೆಗೆ ಪಟ್ಟು ಹಿಡಿದು ಬಿಜೆಪಿ ಸದಸ್ಯರು ವಿಧಾನ ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸುತ್ತಿರುವಾಗಲೇ ಗ್ರಾಮಿಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ ಅವರು 141 ಪುಟಗಳ ಈ ಮಸೂದೆಯನ್ನು ಪರ್ಯಾಲೋಚನೆಗಾಗಿ ಮಂಡಿಸಿದರು.
ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ‘ಸದನದ ಕಲಾಪ ಸುಸೂತ್ರವಾಗಿ ನಡೆಯುತ್ತಿಲ್ಲ. ಇಂತಹ ಮಹತ್ವದ ಮಸೂದೆಯ ಬಗ್ಗೆ ವಿಸ್ತೃತ ಚರ್ಚೆ ಆಗಬೇಕು. ಸದಸ್ಯರು ಪ್ರತಿಭಟನೆ ನಡೆಸುತ್ತಿರುವಾಗ ತರಾತುರಿಯಲ್ಲಿ ಮಸೂದೆಗೆ ಅಂಗೀಕಾರ ಪಡೆಯುವುದು ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.
‘ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವವರು ನೀವೆ. ಮಸೂದೆ ಚರ್ಚೆಗೆ ಅವಕಾಶ ಕಲ್ಪಿಸಿದ್ದೇನೆ. ಧರಣಿ ಕೈಬಿಟ್ಟು ಚರ್ಚೆಯಲ್ಲಿ ಭಾಗವಹಿಸಿ’ ಎಂದು ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸೂಚಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ಒಪ್ಪಲಿಲ್ಲ. ಗದ್ದಲದ ನಡುವೆಯೇ ಸಭಾಧ್ಯಕ್ಷರು ಮಸೂದೆಯನ್ನು ಮತಕ್ಕೆ ಹಾಕಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.