ಬೆಂಗಳೂರು (ಪಿಟಿಐ): ನಿರೀಕ್ಷೆ ಹುಸಿಯಾಯಿತು. ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಸೇರಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 7ಕ್ಕೆ ಮುಂದೂಡಿ ಕರ್ನಾಟಕ ಹೈಕೋರ್ಟ್ ಬುಧವಾರ ಆದೇಶಿಸಿದೆ.
ಈ ಮೂಲಕ ದಸರಾಗೂ ಮುನ್ನವೇ ಜಯಲಲಿತಾ ಅವರು ಜೈಲಿನಿಂದ ಹೊರ ಬರುವ ಎಲ್ಲಾ ಅವಕಾಶಗಳು ಅಸ್ತಮಿಸಿವೆ.
ಮಂಗಳವಾರ ಜಾಮೀನು ಅರ್ಜಿಯನ್ನು ವಿಚಾರಣೆ ಕೈಗೆತ್ತಿಕೊಂಡಿದ್ದ ದಸರಾ ರಜಾಕಾಲದ ನ್ಯಾಯಪೀಠ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ನಿಗದಿ ಪಡಿಸಿತ್ತು.
ಆದರೆ ಇದೊಂದು ವಿಶೇಷ ಹಾಗೂ ತುರ್ತು ಪ್ರಕರಣವೆಂದು ಪರಿಗಣಿಸಿ ಅರ್ಜಿಯನ್ನು ತಕ್ಷಣವೇ ವಿಚಾರಣೆ ನಡೆಸಬೇಕು ಎಂದು ಜಯಲಲಿತಾ ಅವರ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರು ನ್ಯಾಯಾಲಯವನ್ನು ಕೋರಿದ್ದರು. ಪರಿಣಾಮವಾಗಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಬುಧವಾರ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.