ಕೃಷ್ಣಗಿರಿ, ತಮಿಳುನಾಡು (ಪಿಟಿಐ): ಕರ್ನಾಟಕ ಸರ್ಕಾರ ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂಬ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಪವನ್ನು ಶನಿವಾರ ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಕೋರ್ಟಿನ ಸಲಹಾಸೂತ್ರಗಳ ಅನ್ವಯ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಜಯಲಲಿತಾ ಅವರ ಆರೋಪಗಳನ್ನು ನಿರಾಧಾರ ಎಂದ ಸಿದ್ದರಾಮಯ್ಯ, ಈ ಸಂಬಂಧ ಜಯಾ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ವಾಸ್ತವಿಕವಾದ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದರು ಎಂದು ಆರೋಪಿಸಿದರು.
‘ಸಮಸ್ಯೆಯ ಮೂಲವೇ ಅವರು. ಕಾವೇರಿ ವಿವಾದದಲ್ಲಿ ತಮ್ಮ ಪಾತ್ರ ಏನು ಎಂಬುದು ಅವರಿಬ್ಬರಿಗೂ ತಿಳಿದಿದೆ. ಅವರು ತಮ್ಮ ತಪ್ಪುಗಳನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ’ ಎಂದು ಜರಿದರು.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಕಾಂಗ್ರೆಸ್ ಸರ್ಕಾರ ಯಾವತ್ತೂ ಪಾಲಿಸುತ್ತಿದೆ. ಸಂಗ್ರಹ ಹಾಗೂ ಉಪಯುಕ್ತತೆಯ ಆಧಾರದಲ್ಲಿ ನೀರು ಬಿಡುಗಡೆಯಾಗುತ್ತಿದೆ ಎಂದೂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಏಪ್ರಿಲ್ 24ರಂದು ನಡೆಯುವ ಲೋಕಸಭಾ ಚುನಾವಣೆ ಹಿನ್ನೆಲೆ ಸಿದ್ದರಾಮಯ್ಯ ಅವರು ಇಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.