ADVERTISEMENT

ಜಾಮೀನು ಅರ್ಜಿ ವಿಚಾರಣೆ ಅ.6ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2014, 9:32 IST
Last Updated 30 ಸೆಪ್ಟೆಂಬರ್ 2014, 9:32 IST

‌ಬೆಂಗಳೂರು (ಪಿಟಿಐ): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್್ ಮಂಗಳವಾರ ಅಕ್ಟೋಬರ್ 6ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ದಸರಾ ರಜಾ ಕಾಲದ ನ್ಯಾಯಪೀಠ ವಿಚಾರಣಾಧೀನ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಾಗೂ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡಿತು.

ವಿಚಾರಣೆ ವೇಳೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ ಆಗಿ ನೇಮಕಗೊಂಡಿರುವ ಬಗ್ಗೆ ಅಧಿಕೃತ ದಾಖಲೆಗಳು ತಮಗೆ ಇನ್ನೂ ತಲುಪಿಲ್ಲ ಎಂದು ಪ್ರಾಸಿಕ್ಯೂಷನ್ ಪರ ಹಾಜರಾದ ಜಿ. ಭವಾನಿಸಿಂಗ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ADVERTISEMENT

ಅಲ್ಲದೇ ಇನ್ನಷ್ಟು ಸಮಯ ಕೋರಿದ ಭವಾನಿ ಸಿಂಗ್ ಅವರ ಮನವಿ ಪುರಸ್ಕರಿಸಿದ ರಜಾ ಕಾಲ ಪೀಠದಲ್ಲಿದ್ದ  ನ್ಯಾಯಮೂರ್ತಿ ರತ್ನಕಲಾ ಅವರು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ನಿಗದಿಪಡಿಸಿದರು.

ಅರ್ಜಿಯಲ್ಲಿ ತಕ್ಷಣವೇ ಜಾಮೀನು ನೀಡುವಂತೆ ಕೋರಿರುವ  ಜಯಲಲಿತಾ ಅವರು ಅಕ್ರಮ ಆಸ್ತಿ ಗಳಿಕೆ ಆರೋಪವನ್ನು ಅಲ್ಲಗಳೆಯುವ ಜೊತೆಗೆ ಸಂಪತ್ತನ್ನು ಕಾನೂನು ಬದ್ಧವಾಗಿಯೇ ಸಂಪಾದಿಸಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 29ರಿಂದ ಹೈಕೋರ್ಟ್‌ಗೆ ದಸರಾ ರಜೆ ಆರಂಭಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.