ADVERTISEMENT

ಡೆಂಗಿ ಉಲ್ಬಣ: ರಾತ್ರಿ ಪಾಳಿ ಶುಶ್ರೂಷಕಿ ಅಮಾನತಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2017, 19:30 IST
Last Updated 19 ಅಕ್ಟೋಬರ್ 2017, 19:30 IST

ಕಲಬುರ್ಗಿ: ಇಲ್ಲಿನ ಜಿಲ್ಲಾಸ್ಪತ್ರೆಯ ಡೆಂಗಿ ವಾರ್ಡ್‌ನಲ್ಲಿ ರಾತ್ರಿ ಪಾಳಿ ಕರ್ತವ್ಯಕ್ಕೆ ಗೈರು ಹಾಜರಾಗಿರುವ ಶುಶ್ರೂಷಕಿಯನ್ನು ಅಮಾನತು ಮಾಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೂಚಿಸಿದರು.

ಗುರುವಾರ ಡೆಂಗಿ ವಾರ್ಡ್‌ಗೆ ದಿಢೀರ್ ಭೇಟಿ ನೀಡಿದ ಅವರು, ಅಲ್ಲಿನ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. ಆಗ ರೋಗಿಯೊಬ್ಬರು, ‘ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದರೆ ಜ್ವರ ಕಡಿಮೆ ಆಗಿಲ್ಲ. ಬುಧವಾರ (ಅ.18) ರಾತ್ರಿ ಪಾಳಿಯಲ್ಲಿ ಶುಶ್ರೂಷಕರೂ ಕೂಡ ಇರಲಿಲ್ಲ. ಇದರಿಂದಾಗಿ ತೊಂದರೆ ಅನುಭವಿಸುವಂತಾಯಿತು’ ಎಂದು ಆತಂಕ ವ್ಯಕ್ತಪಡಿಸಿದರು.

ಇದರಿಂದ ಸಿಟ್ಟಾದ ಸಚಿವರು, ‘ರಾತ್ರಿ ಪಾಳಿಯಲ್ಲಿ ಶುಶ್ರೂಷಕಿ ಗೈರು ಹಾಜರಾಗಿದ್ದು ಏಕೆ ಎನ್ನುವ ಕುರಿತು ಪರಿಶೀಲನೆ ನಡೆಸಬೇಕು. ತಪ್ಪು ಎಸಗಿರುವುದು ಕಂಡು ಬಂದರೆ ಅಮಾನತು ಮಾಡಬೇಕು’ ಎಂದು ಅಧಿಕಾರಿಗೆ ಸೂಚಿಸಿದರು.

ADVERTISEMENT

‘ಜಿಲ್ಲೆಯಲ್ಲಿ ಡೆಂಗಿ ಉಲ್ಬಣಿಸುತ್ತಿದ್ದು, ಜಿಲ್ಲಾಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಎಲ್ಲ ವೈದ್ಯರು ಮತ್ತು ಶುಶ್ರೂಷಕಿಯರು ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದು ತಾಕೀತು ಮಾಡಿದರು.

ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಸರ್ಜನ್‌  ಡಾ.ಎನ್‌.ಬಿ. ಜೋಶಿ ಹಾಗೂ ಸ್ಥಾನಿಕ ವೈದ್ಯಾಧಿಕಾರಿ ಇರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.