ADVERTISEMENT

ದುಬಾರಿಯಾಗಲಿದೆ ನಂದಿನಿ ಹಾಲು

​ಪ್ರಜಾವಾಣಿ ವಾರ್ತೆ
Published 21 ಜನವರಿ 2013, 19:59 IST
Last Updated 21 ಜನವರಿ 2013, 19:59 IST

ಬೆಂಗಳೂರು: ಎಲ್ಲ ಮಾದರಿ ಹಾಲಿನ ಮಾರಾಟ ದರವನ್ನು ಫೆಬ್ರುವರಿ 1ರಿಂದ ಪ್ರತಿ ಲೀಟರ್‌ಗೆ ರೂ 4 ಹೆಚ್ಚಿಸಲು ಅನುಮತಿ ಕೊಡುವಂತೆ ಸೋಮವಾರ ನಡೆದ ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಆಡಳಿತ ಮಂಡಳಿಯ ಸಭೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದೆ

ಕೆಎಂಎಫ್, ಸದ್ಯ ರೂ30 ಕೋಟಿ ನಷ್ಟದಲ್ಲಿದೆ. ಹೀಗಾಗಿ ಹಾಲಿನ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ `ಪ್ರಜಾವಾಣಿ'ಗೆ ತಿಳಿಸಿದರು.
ಈ ಮಧ್ಯೆ, ಹಾಲಿನ ದರ ಏರಿಕೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿಧಾನಸೌಧದಲ್ಲಿ ಹೇಳಿದರು.

ಮರುಪರೀಕ್ಷೆಗೆ ತೀರ್ಮಾನ: ಕೆಎಂಎಫ್‌ನಲ್ಲಿ ಖಾಲಿ ಇದ್ದ ವಿವಿಧ ದರ್ಜೆಯ 53 ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆ, ನಿಯಮಗಳಿಗೆ ವಿರುದ್ಧವಾಗಿದೆ ಎಂಬ ಕಾರಣಕ್ಕೆ ಮರು ಪರೀಕ್ಷೆ ನಡೆಸಲು ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹುದ್ದೆಗಳಿಗೆ ಸಂದರ್ಶನ ನಡೆಸಲು ಸಿದ್ಧತೆ ನಡೆದಿತ್ತು. ಆದರೆ, ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಹರ್ಷ ಗುಪ್ತ ಅವರು ಅದಕ್ಕೆ ಅವಕಾಶ ನೀಡದೆ, ನಿಯಮಗಳ ಅನುಸಾರ ಮತ್ತೊಮ್ಮೆ ಪರೀಕ್ಷೆ ನಡೆಸಬೇಕು ಎಂದು ಆಗ್ರಹಪಡಿಸಿದರು. ಆಡಳಿತ ಮಂಡಳಿ ಇದಕ್ಕೆ ಒಲ್ಲದ ಮನಸ್ಸಿನಲ್ಲೇ ಒಪ್ಪಿಗೆ ಸೂಚಿಸಿತು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.