ರಾಯಚೂರು: ‘ಸೋನಿಯಾ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಹುದ್ದೆಯಿಂದ ನಿವೃತ್ತಿಯಾಗುತ್ತಿದ್ದಾರೆ. ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಅವರು ಹೇಳಿಲ್ಲ; ನಿವೃತ್ತಿ ಹಾದಿಯಲ್ಲಿದ್ದೇನೆ ಎಂದು ಹೇಳಿದ್ದಾರೆ. ಅದೇ ರೀತಿ ನಾನು ಕೂಡಾ ರಾಜಕೀಯ ನಿವೃತ್ತಿ ಅಂಚಿನಲ್ಲಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂಬರುವ ವಿಧಾನಸಭೆ ಚುನಾವಣೆ ಬಳಿಕ ಮತ್ತೆಸ್ಪರ್ಧಿಸುವುದಿಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಈ ಹಿಂದೆಯೇ ನಿವೃತ್ತಿ ಪಡೆಯಬೇಕು ಎಂದು ನಿರ್ಧರಿಸಿದ್ದೆ. ಆದರೆ ಬಿಜೆಪಿಯವರ ಕೋಮು ಪ್ರಚೋದನೆಗೆ ಕಡಿವಾಣ ಹಾಕಬೇಕು ಎಂಬ ಕಾರಣಕ್ಕೆ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದೆ’ ಎಂದು ತಿಳಿಸಿದರು.
‘ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಹಿನ್ನಡೆಯಾಗುತ್ತದೆ ಎಂಬುದೆಲ್ಲ ಸುಳ್ಳು. ನಾನು ರಾಜ್ಯದ 20 ಕ್ಷೇತ್ರಗಳಲ್ಲಿ ನಿಂತು ಗೆಲ್ಲಬಲ್ಲೆ. ಇದು ನನ್ನ ಕೊನೆ ಚುನಾವಣೆ ಆಗಿರುವುದರಿಂದ ನನಗೆ ಶಕ್ತಿ ತುಂಬಿದ, ರಾಜಕೀಯವಾಗಿ ಮರುಜೀವ ತುಂಬಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದು ಸ್ಪಷ್ಟಪಡಿಸಿದರು.
‘ಕೋಮು ಗಲಭೆ ಮಾಡುವುದನ್ನೇ ಬಿಜೆಪಿಯವರು ದೊಡ್ಡ ಸಾಧನೆ ಎಂದು ತಿಳಿದಿದ್ದಾರೆ. ಕಲ್ಲು ಹೊಡೆಸುವುದು, ಬೆಂಕಿ ಹಚ್ಚುವುದೇ ಸಾಧನೆಯಾ? ರಾಮಲಿಂಗಾರೆಡ್ಡಿ ಅವರು ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಆರು ಬಾರಿ ಆಯ್ಕೆಯಾಗಿದ್ದಾರೆ. ಅನಂತಕುಮಾರ್ ಹೆಗಡೆ ರೌಡಿಗಳಂತೆ ಮಾತನಾಡುತ್ತಾರೆ. ರೌಡಿ ರೀತಿ ನಡೆದುಕೊಳ್ಳುವವರು ರಾಜಕೀಯದಲ್ಲಿರಲು ಲಾಯಕ್ಕಾ’ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.