ADVERTISEMENT

ನಾಳೆ ಭಾರತ್‌ ಬಂದ್‌; ಬ್ಯಾಂಕ್‌ ವಹಿವಾಟು ಸ್ಥಗಿತ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2015, 13:14 IST
Last Updated 1 ಸೆಪ್ಟೆಂಬರ್ 2015, 13:14 IST

ಬೆಂಗಳೂರು: ಕೇಂದ್ರ ಸರ್ಕಾರದ ಉದ್ದೇಶಿತ ‘ರಸ್ತೆ ಸಾರಿಗೆ ಸುರಕ್ಷತಾ ಮಸೂದೆ’ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ (ಸೆಪ್ಟೆಂಬರ್‌ 2) ರಾಷ್ಟ್ರ ವ್ಯಾಪಿ ಮುಷ್ಕರ ನಡೆಸಲಿವೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಮತ್ತು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಬಂದ್‌ಗೆ ಬೆಂಬಲ ಸೂಚಿಸಿದ್ದು, ನಾಳೆ ವಹಿವಾಟು ಸ್ಥಗಿತಗೊಳಿಸುವುದಾಗಿ ಹೇಳಿವೆ. ಬಹುತೇಕ ಖಾಸಗಿ ಶಾಲಾ–ಕಾಲೇಜುಗಳು  ರಜೆ ಘೋಷಿಸಿವೆ.  ಅಂಗಡಿಗಳು, ಮಾರುಕಟ್ಟೆ ತೆರೆದಿರುವುದಿಲ್ಲ.

ಆಸ್ಪತ್ರೆಗಳು, ಔಷಧ ಅಂಗಡಿ ಮತ್ತು ಹೆಚ್ಚಿನ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.  ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ, ಎಲ್ಲ ಸರ್ಕಾರಿ ಉದ್ಯೋಗಿಗಳು ಸೆ.2ರಂದು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿದೆ. ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈನಲ್ಲಿರುವ ಐಟಿ ಕಂಪೆನಿಗಳು ಉದ್ಯೋಗಿಗಳಿಗೆ ರಜೆ ನೀಡಿಲ್ಲ.

ಮುಷ್ಕರ ಸೆ. 2ರ ಬೆಳಿಗ್ಗೆ 6ರಿಂದ ಸೆ.3ರ ಬೆಳಿಗ್ಗೆ 6ರ ವರೆಗೆ ನಡೆಯಲಿದೆ ಎಂದು ಕಾರ್ಮಿಕ ಸಂಘಟನೆಗಳು ಘೋಷಿಸಿವೆ.

ಕೆಎಸ್‌ ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಕರ್ನಾ ಟಕ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಒಟ್ಟು 1.20 ಲಕ್ಷ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5ರ ನಂತರ ಬಸ್‌ಗಳ ಸಂಚಾರ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.