ಬೆಂಗಳೂರು: ಸಾಮಾಜಿಕ ಜಾಲತಾಣ ‘ಫೇಸ್ಬುಕ್’ ಮೂಲಕ ಸಾಮಾಜಿಕ ಕಾರ್ಯಕರ್ತೆಯೊಬ್ಬರಿಗೆ ಅತ್ಯಾಚಾರದ ಬೆದರಿಕೆ ಹಾಕಿದ ಆರೋಪದ ಮೇಲೆ ವಿ.ಆರ್.ಭಟ್ (45) ಅವರನ್ನು ಬಂಧಿಸಿರುವ ನಗರ ಪೊಲೀಸರು, ಆರೋಪಿ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
‘ವೈಜ್ಞಾನಿಕ ಸಂಶೋಧನೆ, ಚಿಂತನೆ–ಶ್ರಮ ಸಂಸ್ಕೃತಿ’ ವಿಷಯ ಕುರಿತು ಸಾಮಾಜಿಕ ಕಾರ್ಯಕರ್ತೆ ಪ್ರಭಾ ಎಂಬುವವರು ಫೇಸ್ಬುಕ್ ಖಾತೆಯಲ್ಲಿ ಜುಲೈ 24ರಂದು ಬರೆದಿದ್ದ ಬರಹಕ್ಕೆ ಭಟ್ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದರು.
ಈ ಸಂಬಂಧ ಜು. 28ರಂದು ಚಂದ್ರಾಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ನಿಂದನೆ, ಅಪರಾಧ ಸಂಚು ಮತ್ತು ಮಾಹಿತಿ ತಂತ್ರಜ್ಞಾನ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಶನಿವಾರ ಬೆಳಿಗ್ಗೆ ನಂದಿನಿ ಲೇಔಟ್ನಲ್ಲಿ ಅವರನ್ನು ಬಂಧಿಸಲಾಯಿತು.
‘ಭಟ್ ಅವರನ್ನು ಚಂದ್ರಾಲೇಔಟ್ ಠಾಣೆಯ ರೌಡಿಗಳ ಪಟ್ಟಿಗೆ ಸೇರಿಸಲಾಗುವುದು. ಬಳಿಕ, ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುವುದು’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಹೇಳಿದ್ದಾರೆ.
ಗೌರಿ ಲಂಕೇಶ್ ದೂರು
‘ವಿ.ಆರ್.ಭಟ್ ಅವರು ನನ್ನ ಫೇಸ್ಬುಕ್ ಖಾತೆಗೆ ಕೋಮು–ದ್ವೇಷ ಬಿತ್ತುವ ಸಂದೇಶ ರವಾನಿಸಿದ್ದಾರೆ. ಈ ಮೂಲಕ ನೆಮ್ಮದಿ ಹಾಳು ಮಾಡಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿ ಪತ್ರಕರ್ತೆ ಗೌರಿ ಲಂಕೇಶ್ ಸಹ ಬಸವನಗುಡಿ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.
‘ಜುಲೈ 14ರಂದು ಸಂಜೆ 5.30ಕ್ಕೆ ವಿ.ಆರ್.ಭಟ್ ಅವರು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಬರಹ ಬರೆದು ಗೌರಿ ಲಂಕೇಶ್ ಅವರ ಖಾತೆಗೆ ಸಂದೇಶ ರವಾನಿಸಿದ್ದಾರೆ. ಹೀಗಾಗಿ ಬಸವನಗುಡಿ ಠಾಣೆಯ ರೌಡಿಗಳ ಪಟ್ಟಿಯಲ್ಲೂ ಅವರ ಹೆಸರು ಸೇರಿಸಲಾಗುವುದು’ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.