ADVERTISEMENT

ಬಡ್ತಿ ಮೀಸಲಾತಿ ಸುಗ್ರೀವಾಜ್ಞೆ ವಾಪಸ್‌

ಸರ್ಕಾರದ ತೀರ್ಮಾನ ಪ್ರಶ್ನಿಸಿದ ರಾಜ್ಯಪಾಲ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 19:30 IST
Last Updated 22 ಆಗಸ್ಟ್ 2017, 19:30 IST
ಬಡ್ತಿ ಮೀಸಲಾತಿ ಸುಗ್ರೀವಾಜ್ಞೆ ವಾಪಸ್‌
ಬಡ್ತಿ ಮೀಸಲಾತಿ ಸುಗ್ರೀವಾಜ್ಞೆ ವಾಪಸ್‌   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ನೌಕರರ ಹಿತಕಾಯಲು ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಿಸಿರುವ ರಾಜ್ಯಪಾಲರು ಅದನ್ನು ವಾಪಸ್‌ ಕಳುಹಿಸಿದ್ದಾರೆ.

ಬಡ್ತಿ ಮೀಸಲಾತಿ ಕಾಯ್ದೆ ಅನ್ವಯ ಮುಂಬಡ್ತಿ ಪಡೆದಿದ್ದ ನೌಕರರಿಗೆ ಹಿಂಬಡ್ತಿ ನೀಡದೇ ಇರಲು ಮತ್ತು ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಲು ಸುಗ್ರೀವಾಜ್ಞೆ ತರುವ ಮಹತ್ವದ ತೀರ್ಮಾನವನ್ನು ಸಚಿವ ಸಂ‍ಪುಟ ಕೈಗೊಂಡಿತ್ತು.

‘ಈ ವಿಷಯದಲ್ಲಿ ಸುಗ್ರೀವಾಜ್ಞೆ ತರುವ ಅನಿವಾರ್ಯತೆಯ ಬಗ್ಗೆ ಸರ್ಕಾರ ಸೂಕ್ತ ವಿವರಣೆ ನೀಡಿಲ್ಲ. ಅಂತಹ ಅನಿವಾರ್ಯತೆ ಏನಿದೆ’ ಎಂದು ರಾಜ್ಯಪಾಲರು ಸರ್ಕಾರದಿಂದ ವಿವರಣೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

‘ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಹಿಂಬಡ್ತಿ ನೀಡಬೇಕಾದ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಿ, ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ’ ಎಂದು ಅವರು ಸಲಹೆ ನೀಡಿದ್ದಾರೆ.

ರಾಜ್ಯ ಸರ್ಕಾರದ ‘ಬಡ್ತಿ ಮೀಸಲಾತಿ ಕಾಯ್ದೆ 2002’ರನ್ನು ಇದೇ ವರ್ಷದ ಫೆಬ್ರುವರಿ 9ರಂದು ರದ್ದು ಪಡಿಸಿದ್ದ ಸುಪ್ರೀಂಕೋರ್ಟ್‌, ನೌಕರರ ಸೇವಾ ಜ್ಯೇಷ್ಠತಾ ಪಟ್ಟಿ ಪರಿಷ್ಕರಿಸಬೇಕು ಹಾಗೂ ಬಡ್ತಿಯಿಂದ ವಂಚಿತರಾದವರಿಗೆ ಆಗಸ್ಟ್‌ 9ರೊಳಗೆ ಮುಂಬಡ್ತಿ ನೀಡಬೇಕು ಎಂದು ಆದೇಶಿಸಿದ್ದರಿಂದ ಪರಿಶಿಷ್ಟ ಜಾತಿ, ಪಂಗಡಗಳ ನೌಕರರು ಹಿಂಬಡ್ತಿ ಭೀತಿ ಎದುರಿಸುತ್ತಿದ್ದರು. ರಾಜ್ಯ ಸರ್ಕಾರ ಇದೇ 8ರಂದು ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ತೀರ್ಮಾನ ಕೈಗೊಂಡಿತ್ತು. ಸುಗ್ರೀವಾಜ್ಞೆಗೆ ಅನುಮೋದನೆ ನೀಡುವಂತೆ ಕೋರಿ, ಕಡತವನ್ನು ಇದೇ 9ರಂದು ರಾಜ್ಯಪಾಲರಿಗೆ ಸಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.