ADVERTISEMENT

ಬಿಜೆಪಿ ಅಧ್ಯಕ್ಷರಿಗೆ ಪೊಲೀಸರ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 20:19 IST
Last Updated 22 ಸೆಪ್ಟೆಂಬರ್ 2017, 20:19 IST

ಬೆಂಗಳೂರು: ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ (ಪಿ.ಎ) ವಿನಯ್ ಅವರ ಅಪಹರಣಕ್ಕೆ ಯತ್ನ ಹಾಗೂ ಹಲ್ಲೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೊಲೀಸರು ಶುಕ್ರವಾರ ನೋಟಿಸ್‌ ನೀಡಿದ್ದಾರೆ.

ಡಾಲರ್ಸ್‌ ಕಾಲೊನಿಯಲ್ಲಿರುವ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದ ಮಲ್ಲೇಶ್ವರ ಉಪವಿಭಾಗದ ಪೊಲೀಸರು, ಖುದ್ದಾಗಿ ಅವರ ಕೈಗೆ ನೋಟಿಸ್‌ ಪ್ರತಿ ಕೊಟ್ಟಿದ್ದಾರೆ. ಅದರ ಸ್ವೀಕೃತಿಗೆ ಯಡಿಯೂರಪ್ಪ ಅವರು ಸಹಿ ಮಾಡಿದ್ದಾರೆ.

‘ಮಹಾಲಕ್ಷ್ಮಿ ಲೇಔಟ್‌ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 163/17ರ (ವಿನಯ್‌ ಅಪಹರಣಕ್ಕೆ ಯತ್ನ, ಹಲ್ಲೆ) ಪ್ರಕರಣದಲ್ಲಿ ತಮ್ಮ ವಿಚಾರಣೆ ಅವಶ್ಯವಾಗಿದೆ. ಸೆಪ್ಟೆಂಬರ್‌ 28ರಂದು ಬೆಳಿಗ್ಗೆ 10.30 ಗಂಟೆಗೆ ಮಹಾಲಕ್ಷ್ಮಿಪುರದ 2ನೇ ಮುಖ್ಯರಸ್ತೆಯಲ್ಲಿರುವ ನನ್ನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು’ ಎಂದು ಎಸಿಪಿ ಬಡಿಗೇರ್‌ ಅವರು ನೋಟಿಸ್‌ನಲ್ಲಿ ಬರೆದಿದ್ದಾರೆ.

ADVERTISEMENT

ಈ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿ, ‘ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಸೇರಿ ಹಲವರನ್ನು ಈಗಾಗಲೇ ಬಂಧಿಸಿದ್ದೇವೆ. ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್‌.ಆರ್‌. ಸಂತೋಷ್‌ ಸಹ ಆರೋಪಿಯಾಗಿದ್ದು, ಸದ್ಯ ಸ್ಥಳೀಯ ನ್ಯಾಯಾಲಯವು ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ’ ಎಂದರು.

‘ಪ್ರಕರಣದಲ್ಲಿ ಸಂತೋಷ್‌ ಪಾತ್ರದ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಬೇಕಿದ್ದು, ಅದಕ್ಕೆ ಯಡಿಯೂರಪ್ಪ ಅವರ ವಿಚಾರಣೆ ಅಗತ್ಯವಿದೆ. ಹೀಗಾಗಿ ಅವರಿಗೆ ನೋಟಿಸ್‌ ನೀಡಿದ್ದೇವೆ. ಅವರು ವಿಚಾರಣೆಗೆ ಬರುವುದಾಗಿ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

ಜಾಮೀನಿಗೆ ಆಕ್ಷೇಪಣೆ: ‘ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿಗಳ ಹೇಳಿಕೆ ಪಡೆಯಲಾಗಿದೆ. ಅದರ ಸಮೇತ ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದು, ಸಂತೋಷ್‌ ಅವರ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತೆ ಕೋರಿದ್ದೇವೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.