ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ರೌಡಿ ಪಟ್ಟಿಯಲ್ಲಿರುವ ವ್ಯಕ್ತಿಯೊಬ್ಬ ಬಂಧಿಸಲು ಬಂದಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಮೇಲೆ ಕಾರು ಹರಿಸಿ ಅವರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಗುರುವಾರ ಬೆಳಿಗ್ಗೆ ಇಲ್ಲಿನ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗ್ರೆಯಲ್ಲಿ ನಡೆದಿದೆ.
ಪಣಂಬೂರು ಪೊಲೀಸ್ ಠಾಣೆಯ ಎಎಸ್ಐ ಪುರಂದರ ಗೌಡ ಅವರ ಮೇಲೆ ಕಾರು ಹರಿಸಲು ಯತ್ನಿಸಿದ ರೌಡಿಶೀಟರ್ ಚಂದು ಹಾರೀಸ್ ಮತ್ತು ಆತನ ಸಹಚರ ಆದಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಂದು ಮತ್ತು ಆತನ ತಂಡದ ಸದಸ್ಯರು ದರೋಡೆಗೆ ಹೊಂಚು ಹಾಕುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆರೋಪಿಗಳ ಬಂಧನಕ್ಕೆ ಪೊಲೀಸರು ಮೂರು ತಂಡಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು.
ಆರೋಪಿಗಳು ಬರುತ್ತಿದ್ದ ಕಾರನ್ನು ಅಡ್ಡಗಟ್ಟಲು ಪುರಂದರ ಗೌಡ ನೇತೃತ್ವದ ತಂಡ ಮುಂದಾಗಿದೆ. ಆಗ ರಸ್ತೆ ಬದಿಯ ಕಂಬವೊಂದಕ್ಕೆ ಕಾರನ್ನು ಡಿಕ್ಕಿ ಹೊಡೆಸಿದ ಚಂದು, ಮುಂದಕ್ಕೆ ನುಗ್ಗಿಬಂದು ಎಎಸ್ಐ ಮೇಲೆ ವಾಹನ ಹರಿಸಲು ಯತ್ನಿಸಿದ್ದ. ಚಂದು ವಿರುದ್ಧ 15 ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪವಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.