ಬೆಂಗಳೂರು: ‘ಜೆಡಿಎಸ್ನ ಏಳು ಬಂಡಾಯ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಯ್ದಿರಿಸಿರುವ ಆದೇಶವನ್ನು ಮೇ 7ರೊಳಗೆ ಪ್ರಕಟಿಸಿ’ ಎಂದು ವಿಧಾನಸಭಾಧ್ಯಕ್ಷರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಸಂಬಂಧ ಜೆಡಿಎಸ್ ಶಾಸಕರಾದ ಮೂಡಿಗೆರೆಯ ಬಿ.ಬಿ.ನಿಂಗಯ್ಯ ಹಾಗೂ ಶ್ರವಣಬೆಳಗೊಳದ ಶಾಸಕ ಸಿ.ಎನ್.ಬಾಲಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿ ಮೇಲಿನ ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಆರ್.ಎಸ್. ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ.
‘ಮಾಜಿ ಶಾಸಕರಾದ ಜಮೀರ್ ಅಹಮದ್ ಖಾನ್, ಚೆಲುವರಾಯ ಸ್ವಾಮಿ, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಎಚ್.ಸಿ.ಬಾಲಕೃಷ್ಣ, ಆರ್.ಅಖಂಡ ಶ್ರೀನಿವಾಸ ಮೂರ್ತಿ, ಇಕ್ಬಾಲ್ ಅನ್ಸಾರಿ ಹಾಗೂ ಎಸ್.ಭೀಮಾನಾಯ್ಕ್ 2016ರ ಜೂನ್ 11ರಂದು ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದಾರೆ. ಆದ್ದರಿಂದ ಇವರನ್ನು ಪಕ್ಷಾಂತರ ನಿಷೇಧ ಕಾಯ್ದೆ–1986ರ ಅನ್ವಯ ಅನರ್ಹಗೊಳಿಸಿ’ ಎಂದು ನಿಂಗಯ್ಯ ಹಾಗೂ ಬಾಲಕೃಷ್ಣ ಸ್ಪೀಕರ್ಗೆ ದೂರು ಸಲ್ಲಿಸಿದ್ದರು. ಈ ದೂರಿಗೆ ಸಂಬಧಿಸಿದಂತೆ ವಿಚಾರಣೆ ನಡೆಸಿದ್ದ ವಿಧಾನಸಭಾಧ್ಯಕ್ಷರು ಆದೇಶ ಕಾಯ್ದಿರಿಸಿದ್ದರು.
‘2018ರ ಮಾರ್ಚ್ 23ರಂದು ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಆದ್ದರಿಂದ ಬಂಡಾಯ ಶಾಸಕರ ವಿರುದ್ಧದ ವಿಚಾರಣೆ ಮೇಲಿನ ಕಾಯ್ದಿರಿಸಿರುವ ಆದೇಶ ಪ್ರಕಟಿಸಲು ನಿರ್ದೇಶಿಸಬೇಕು’ ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.