ಚಿತ್ರದುರ್ಗ: ಸಂಸದ ಶ್ರೀರಾಮುಲು ಶನಿವಾರ ಬೆಳಿಗ್ಗೆ ಮೊಳಕಾಲ್ಲುರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆಪ್ತ ಸ್ನೇಹಿತ ಗಾಲಿ ಜನಾರ್ದನ ರೆಡ್ಡಿ, ಕೂಡ್ಲಿಗಿ ಅಭ್ಯರ್ಥಿ ಎನ್ ವೈ ಗೋಪಾಲಕೃಷ್ಣ ಮತ್ತು ಸಾವಿರಾರು ಬೆಂಬಲಿಗರೊಂದಿಗೆ ಮೊಳಕಾಲ್ಮುರು ಪಟ್ಟಣದಲ್ಲಿ ರೋಡ್ ಶೋ ನಡೆಸಿ, ನಂತರ ನಾಮಪತ್ರ ಸಲ್ಲಿಸಿದರು.
ನುಂಕೆಮಲೆ ಸಿದ್ದೇಶ್ವರಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಶ್ರೀರಾಮುಲು, ಇದಕ್ಕೂ ಮುನ್ನ ಬಳ್ಳಾರಿಯಿಂದ ಹೆಲಿಕಾಪ್ಟರ್ ಮೂಲಕ ಮೊಳಕಾಲ್ಮುರು ಪಟ್ಟಣಕ್ಕೆ ಬಂದಿಳಿದರು.
(ಮೊಳಕಾಲ್ಮುರು ಪಟ್ಟಣದಲ್ಲಿ ರೋಡ್ ಶೋ)
ಮೊಳಕಾಲ್ಮುರು ಕ್ಷೇತ್ರದ ಹಾಲಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಾರದ ಹಿಂದೆ ಕಾರ್ಯರ್ತರ ನಡುವೆ ಸಂಘರ್ಷ ಉಂಟಾಗಿತ್ತು. ನಾಯಕನಹಟ್ಟಿಯಲ್ಲಿ ಪ್ರಚಾರ ಆರಂಭಿಸಲು ಬಂದಿದ್ದ ಶ್ರೀರಾಮುಲುಗೆ ತಿಪ್ಪೇಸ್ವಾಮಿ ಬೆಂಬಲಿಗರು ಘೇರಾವ್ ಹಾಕಿ, ಕಾರಿನ ಮೇಲೆ ಕಲ್ಲು, ಚಪ್ಪಲಿ ತೂರಿದ್ದರು. ಬಿಜೆಪಿ ಮುಖಂಡರಮೇಲೆ ಹಲ್ಲೆಯಾಗಿತ್ತು.
ರೆಡ್ಡಿ ಸಕ್ರಿಯ: 'ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ಹೇಳಿಕೆ ನೀಡಿದ್ದರು. ಈಗ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೊಂದಿಗೆ, ಶ್ರೀರಾಮುಲು ನಾಮಪತ್ರ ಸಲ್ಲಿಕೆ ವೇಳೆ ಕಾಣಿಸಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.