ADVERTISEMENT

ರಮ್ಯಾ ಹೇಳಿಕೆಯಲ್ಲಿ ತಪ್ಪಿಲ್ಲ: ಸಿ.ಎಂ.

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2016, 5:45 IST
Last Updated 29 ಆಗಸ್ಟ್ 2016, 5:45 IST
ರಮ್ಯಾ ಹೇಳಿಕೆಯಲ್ಲಿ ತಪ್ಪಿಲ್ಲ: ಸಿ.ಎಂ.
ರಮ್ಯಾ ಹೇಳಿಕೆಯಲ್ಲಿ ತಪ್ಪಿಲ್ಲ: ಸಿ.ಎಂ.   

ಹುಬ್ಬಳ್ಳಿ: ‘ರಮ್ಯಾ ಅವರ ಹೇಳಿಕೆಯಲ್ಲಿ ಯಾವ ತಪ್ಪೂ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ನವಾಜ್‌ ಷರೀಫ್‌ ಅವರ ಮಗಳ ಮದುವೆಗಾಗಿ ಪಾಕಿಸ್ತಾನಕ್ಕೆ ಹೋಗಿದ್ದು ಯಾಕೆ? ಅಡ್ವಾಣಿ ಅವರು ಮಹಮ್ಮದ್ ಅಲಿ ಜಿನ್ನಾ ಅವರ ಬಗ್ಗೆ ಹೇಳಿಕೆ ನೀಡಿದ್ದು ಏನು? ನಾವು ಬಿಜೆಪಿಯವರಿಂದ ದೇಶಭಕ್ತಿ ಪಾಠ ಕಲಿಯಬೇಕಿಲ್ಲ’ ಎಂದಿದ್ದಾರೆ.

‘ಆಮ್ನೆಸ್ಟಿ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶದ್ರೋಹದ ಘೋಷಣೆ ಕೂಗಿದ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ. ದೂರು ನೀಡಿದ ವ್ಯಕ್ತಿ ಆ ಸ್ಥಳದಲ್ಲೇ ಇರಲಿಲ್ಲ. ಆರ್ಎಸ್ಎಸ್‌ನವರು ತಮ್ಮ ಕಚೇರಿಗಳಲ್ಲಿ ಗಾಂಧೀಜಿ, ಅಂಬೇಡ್ಕರ್‌ ಫೋಟೊ ಹಾಕುವುದಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಕೆ.ಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ‘ಈಶ್ವರಪ್ಪ ಅವರಿಗೆ ಈಗ ಹಿಂದುಳಿದ ವರ್ಗದ ಜನ ನೆನಪಾಗಿದ್ದಾರೆ. ಈ ರಾಜ್ಯದ ಹಿಂದುಳಿದವರಿಗೆ, ದಲಿತರಿಗೆ ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂಬುದು ಗೊತ್ತಿದೆ. ಯಡಿಯೂರಪ್ಪ ಕಾಲು ಎಳೆಯುವ ಉದ್ದೇಶದಿಂದ ಈಶ್ವರಪ್ಪ ರಾಯಣ್ಣ ಬ್ರಿಗೇಡ್ ಕಟ್ಟಿದ್ದಾರೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಹಿಂದುಳಿದವರು ಹಾಗೂ ದಲಿತರ ಮತಗಳು ಬೇಕಂತೆ’ ಎಂದು ವ್ಯಂಗವಾಡಿದರು.

‘ಮುಖ್ಯಮಂತ್ರಿಯಾಗಿದ್ದಾಗ ಒಂದೇ ಒಂದು ದಿನ ಸಾಮಾಜಿಕ ನ್ಯಾಯಾದ ಪರ ಮಾತನಾಡದ ಯಡಿಯೂರಪ್ಪ ಈಗ ಚುನಾವಣೆ ಗೋಸ್ಕರ ಮಾತನಾಡುತ್ತಿದ್ದಾರೆ. ಧೈರ್ಯ ಇದ್ದರೇ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಈಶ್ವರಪ್ಪ ಹೇಳಲಿ ನೋಡೋಣ’ ಎಂದರು.

‘ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆಯಾಗಿ ನಾಳೆಗೆ ಒಂದು ವರ್ಷ. ಇನ್ನೂ ಆರೋಪಿಗಳ ಪತ್ತೆ ಸಾಧ್ಯವಾಗಿಲ್ಲ, ಸಿಐಡಿ ಹಾಗೂ ಸಿಬಿಐ ಅಧಿಕಾರಗಳು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಪ್ರಯತ್ನಗಳು ನಡೆದಿವೆ. ಎಂ.ಎಂ. ಕಲಬುರ್ಗಿ ಅವರ ಹೆಸರಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದೇವೆ. ಅದರ ಅನುಷ್ಠಾನ ಯಾವ ಹಂತದಲ್ಲಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.