ಚಿತ್ರದುರ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಳ್ಳತನ, ಕೊಲೆ, ಸುಲಿಗೆ ಹೆಚ್ಚುತ್ತಿದ್ದು, ಜನ ಆತಂಕದಲ್ಲಿದ್ದಾರೆ ಎಂದು ಸಂಸದ ಬಿ.ಶ್ರೀರಾಮುಲು ದೂರಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯಲ್ಲಿ ಕುಟ್ಟಪ್ಪ, ಮೈಸೂರಿನಲ್ಲಿ ರಾಜು, ನಂತರ ಬೆಂಗಳೂರಿನಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಕೊಲೆಯಾಗಿದ್ದು, ತಪ್ಪಿತಸ್ಥರನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆರ್ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣವನ್ನು ಸರ್ಕಾರ ಕೂಡಲೇ ಸಿಬಿಐಗೆ ವಹಿಸಬೇಕು. ಈ ಕೊಲೆ ಪ್ರಕರಣಗಳಲ್ಲಿ ಯಾರೇ ಭಾಗಿಯಾಗಿದ್ದರು ಕೂಡ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.
ಕಳೆದ ವರ್ಷ ಕೇಂದ್ರ ಸರ್ಕಾರದಿಂದ ಬಂದಂತ ₹16 ಸಾವಿರ ಕೋಟಿ ಖರ್ಚಾಗಿಲ್ಲ. ಅದು ಜಿಲ್ಲಾಡಳಿತದಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರದಿಂದ ಒಂದು ರೂಪಾಯಿಯನ್ನೂ ಕೊಡುವ ಕೆಲಸವಾಗಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲದಿಂದ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.