ಬೆಂಗಳೂರು: ಕುಲಪತಿ ಎಂದು ಹೇಳಿಕೊಂಡು ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಸಂತೋಷ್ ಲೋಹರ್ (37) ಎಂಬಾತನನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಸಂತೋಷ್ 2002ರಲ್ಲಿ ನಗರಕ್ಕೆ ಬಂದಿದ್ದ. ಆತ ಬಯೋ–ಕೆಮಿಕ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂದು ಹೇಳಿಕೊಂಡು, ಕಾಲೇಜುಗಳಿಗೆ ಮಾನ್ಯತೆ ನೀಡುವುದಾಗಿ ಮತ್ತು ಎಂಜಿನಿಯರಿಂಗ್, ವೈದ್ಯಕೀಯ ಸೀಟು ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಎಂದು ದಕ್ಷಿಣ ವಿಭಾಗದ ಡಿಸಿಪಿ ಎಸ್.ಡಿ.ಶರಣಪ್ಪ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪ್ರಕರಣದ ಪ್ರಮುಖ ಆರೋಪಿ ಶ್ಯಾಮಲ್ ದತ್ತ ಎಂಬಾತನನ್ನು ಪಶ್ಚಿಮ ಬಂಗಾಳದ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಎಂಬಿಎ ಪದವಿ ಪಡೆದಿರುವ ಸಂತೋಷ್, ಕೆಲ ವರ್ಷ ನಗರದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಬಳಿಕ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರನ್ನು ಕೆಲಸಕ್ಕೆ ನೇಮಿಸಿಕೊಂಡು ಈ ಕೃತ್ಯ ಎಸಗುತ್ತಿದ್ದ. ಈ ವಿಷಯ ಅಧಿಕಾರಿಗೆ ತಿಳಿದಿರಲಿಲ್ಲ ಎಂದು ಅವರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.