ADVERTISEMENT

ಶಿಥಿಲಾವಸ್ಥೆ ಸರ್ಕಾರಿ ಕಟ್ಟಡ ನೆಲಸಮಕ್ಕೆ ಕ್ರಮ

ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2016, 20:25 IST
Last Updated 9 ಫೆಬ್ರುವರಿ 2016, 20:25 IST
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ರಾಜ್ಯದಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಕಟ್ಟಡಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ವರದಿ ತರಿಸಿಕೊಂಡು, ಅವುಗಳನ್ನು ನೆಲಸಮಗೊಳಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಂಗಳವಾರ ಇಲ್ಲಿ ಹೇಳಿದರು.

ರೈಲು ನಿಲ್ದಾಣದ ಆವರಣದಲ್ಲಿ ಕುಸಿದು ಬಿದ್ದ ಪಾರ್ಸಲ್ ಬುಕಿಂಗ್‌ ಕಚೇರಿ ಕಟ್ಟಡದ ಸ್ಥಳವನ್ನು ವೀಕ್ಷಿಸಿದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಶಿಥಿಲಾವಸ್ಥೆಯಲ್ಲಿರುವ ಹಾಗೂ ಅತ್ಯಂತ ಹಳೆಯ ಕಟ್ಟಡಗಳನ್ನು ತೆರವುಗೊಳಿಸಲು ಯಾರೂ ಹಿಂದೆ ಮುಂದೆ ನೋಡಬಾರದು. ಈ ಬಗ್ಗೆ ರೈಲ್ವೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು ಅಕ್ಷಮ್ಯ. ಇಂತಹ ಘಟನೆಗಳು ರಾಜ್ಯದಲ್ಲಿ ಮುಂದೆಂದೂ ಮರುಕಳಿಸಬಾರದು. ಇದಕ್ಕಾಗಿ ಎಲ್ಲ ಸರ್ಕಾರಿ ಕಟ್ಟಡಗಳ ಇಂದಿನ ಪರಿಸ್ಥಿತಿಯ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು’ ಎಂದರು.

‘ಕಟ್ಟಡ ಕುಸಿತದಿಂದಾಗಿ ಸಾವಿಗೀಡಾದವರ ಕುಟುಂಬಗಳಿಗೆ ಮಾನವೀಯತೆಯ ನೆಲೆಯಲ್ಲಿ ರಾಜ್ಯ ಸರ್ಕಾರವು ತಲಾ ₹ 2 ಲಕ್ಷ ಪರಿಹಾರ ನೀಡಲಿದೆ’ ಎಂದೂ ಸಿದ್ದರಾಮಯ್ಯ ಘೋಷಿಸಿದರು.

‘ಕಟ್ಟಡವು ರೈಲ್ವೆಗೆ ಸೇರಿದ್ದರಿಂದ ಸಾವಿಗೀಡಾದವರ ಕುಟುಂಬಗಳಿಗೆ ಇನ್ನೂ ಹೆಚ್ಚುವರಿ ಪರಿಹಾರವನ್ನು ಇಲಾಖೆ ಘೋಷಿಸಬೇಕು ಹಾಗೂ ಅವಲಂಬಿತರಿಗೆ ಉದ್ಯೋಗ ನೀಡಬೇಕು’ ಎಂದು ಒತ್ತಾಯಿಸಿದರು.

ಅಗ್ನಿಶಾಮಕ ಸಿಬ್ಬಂದಿ ಶ್ರಮಕ್ಕೆ ಶ್ಲಾಘನೆ: ಸೋಮವಾರ ಮಧ್ಯಾಹ್ನದಿಂದ ಮಂಗಳವಾರ ಬೆಳಗಿನ ಜಾವದವರೆಗೂ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಗ್ನಿಶಾಮಕ ಸಿಬ್ಬಂದಿ ಶ್ರಮವನ್ನು ಸಿದ್ದರಾಮಯ್ಯ ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.